ಕುಮಾರ ವಾಲ್ಮೀಕಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

೧೫ನೆಯ ಶತಮಾನದಲ್ಲಿ ಜೀವಿಸಿದ ಕುಮಾರ ವಾಲ್ಮೀಕಿಯು ವಿಜಯಪುರ ಜಿಲ್ಲೆಯ ತೊರವೆ ಗ್ರಾಮದವನು. ಅಲ್ಲಿನ ದೇವರಾದ ನರಸಿಂಹನ ಅಂಕಿತದಲ್ಲಿ ಕಾವ್ಯರಚನೆ ಮಾಡಿದ್ದಾನೆ. ಈತ ಬರೆದ “ತೊರವೆ ರಾಮಾಯಣ”ವು ಜನಪ್ರಿಯವಾದ ನಡುಗನ್ನಡ ಕಾವ್ಯವಾಗಿದೆ. ಕವಿರಾಜಹಂಸ[೧] ಈತನ ಬಿರುದು. ಕುಮಾರ ವಾಲ್ಮೀಕಿಯ ನಿಜವಾದ ಹೆಸರು: ನರಹರಿ.

ಕಾಲ[ಬದಲಾಯಿಸಿ]

ಕ್ರಿ.ಶ.ಸು. ೧೫೦೦.

ಕೃತಿ[ಬದಲಾಯಿಸಿ]

ತೊರವೆ ರಾಮಾಯಣ, ಐರಾವಣನಕಾಳಗ.

ಸ್ಥಳ[ಬದಲಾಯಿಸಿ]

ವಿಜಯಪುರ ಜಿಲ್ಲೆಯ ತೊರವೆ ಗ್ರಾಮ. ಅಲ್ಲಿನ ದೇವರಾದ ನರಸಿಂಹನ ಅಂಕಿತದಲ್ಲಿ ಕಾವ್ಯರಚನೆ ಮಾಡಿದ್ದಾನೆ.

ಬಿರುದು[ಬದಲಾಯಿಸಿ]

ಕವಿರಾಜ ಹಂಸ

ತೊರವೆ ರಾಮಾಯಣ[ಬದಲಾಯಿಸಿ]

ಈತ ಬರೆದ ತೊರವೆ ರಾಮಾಯಣವು ಜನಪ್ರಿಯವಾದ ನಡುಗನ್ನಡ ಕಾವ್ಯವಾಗಿದೆ. ಕುಮಾರವ್ಯಾಸನಂತೆ ಈತ ಸಹ ಭಾಮಿನಿ ಷಟ್ಪದಿಯಲ್ಲಿ ರಚಿಸಿರುತ್ತಾನೆ. ಇದು ಎರಡು ಸಂಪುಟಗಳ ಬೃಹತ್ಕಾವ್ಯ.

ಸಾಹಿತ್ಯ[ಬದಲಾಯಿಸಿ]

ವಾಲ್ಮೀಕಿ ರಾಮಾಯಣದ ಕಥೆಯನ್ನು ಅಂದಗೆಡದಂತೆ ಮೊತ್ತ ಮೊದಲಬಾರಿಗೆ ಕನ್ನಡಕ್ಕೆ ಕೊಟ್ಟ ಕೀರ್ತಿ ತೊರವೆಯ ನರಹರಿಗೆ ಅರ್ಥಾತ್ ಕುಮಾರವಾಲ್ಮೀಕಿಗೆ ಸೇರಿದ್ದು. ನಿರೂಪಣೆ ಮತ್ತು ದೃಷ್ಟಿಗಳಲ್ಲಿ ನಾರಣಪ್ಪನ ಸಂಪ್ರದಾಯಕ್ಕೆ ಸೇರಿದವನು ನರಹರಿ. ರಾಮಾವತಾರದ ಮಹತ್ವವನ್ನು ಸಾರಿ ರಾಮಭಕ್ತಿಯ ತರಂಗಿಣಿಯಲ್ಲಿ ಆಸ್ತಿಕರನ್ನು ಮೀಯಿಸುವುದೇ ಅವನ ಪರಮ ಗುರಿ. ನಾರಣಪ್ಪನ ಭಾಷಾ ಸಾಮರ್ಥ್ಯವಾಗಲೀ ರೂಪಕ ವೈಭವವಾಗಲೀ ಕಲ್ಪನೋಜ್ವಲತೆಯಾಗಲೀ ಅವನಿಗಿಲ್ಲ. ಜನಮನಸ್ಸಿಗೆ ತಾಕುವಂತೆ ಸರಳವಾಗಿ ನಿರರ್ಗಳವಾಗಿ ಕಥೆ ಹೇಳುವುದೇ ಅವನ ಉದ್ದೇಶ. ರಾಮವ್ಯಕ್ತಿತ್ವಕ್ಕೆ ತನ್ನನ್ನು ಅರ್ಪಿಸಿಕೊಂಡದ್ದರಿಂದ ಕಾವ್ಯದಲ್ಲಿ ತಲೆದೋರುವ ರಾಮಚಾರಿತ್ರ್ಯದ ಕೆಲವು ವಿರೋಧಾಭಾಸಗಳ ಬಗ್ಗೆ ಆತ ತಲೆಕೆಡಿಸಿಕೊಳ್ಳುವುದಿಲ್ಲ. ರಾಮ ದೇವರಾದುದರಿಂದ ಆತನ ಕಾರ್ಯಗಳೆಲ್ಲ ದೋಷರಹಿತವೆಂದೇ ಅವನ ಭಾವನೆ. ಆದ್ದರಿಂದ ಬುದ್ದಿಜನ್ಯವಾದ ಜಿಜ್ಞಾಸೆಗಳಿಗೆ ಇಲ್ಲಿ ಎಡೆಯೇ ಇಲ್ಲ. ಮೂಲಕಥೆಯನ್ನು ಅಗತ್ಯವಾದೆಡೆ ಹಿಗ್ಗಿಸಿ, ಅನಗತ್ಯವಾದೆಡೆ ಸಂಕ್ಷಿಪ್ತಗೊಳಿಸುವುದು ಶ್ರೇಷ್ಠ ಕವಿಯ ಸಲ್ಲಕ್ಷಣಗಳಲ್ಲಿ ಒಂದು. ಆದರೆ ಕುಮಾರವಾಲ್ಮೀಕಿ ವಾಲ್ಮೀಕಿಯ ಕಥಾಸಂವಿಧಾನವನ್ನು ಅತ್ಯಂತ ಅಗತ್ಯವೂ ರೋಚಕವೂ ಆದ ಎಡೆಗಳಲ್ಲೇ ಕುಗ್ಗಿಸಿ, ಅನಗತ್ಯವೂ ಅನಾಕರ್ಷಕವೂ ಆದೆಡೆಗಳಲ್ಲೆ ಹಿಗ್ಗಿಸಿ ಕಾವ್ಯಕ್ಕೆ ಬೊಜ್ಜು ಹೆಚ್ಚಿಸಿದ್ದಾನೆ.

ವಾಲ್ಮೀಕಿಯಲ್ಲಿ ಬಾಲಕಾಂಡ ಅತ್ಯಂತ ಚಿಕ್ಕದು. ಆದರೆ ನರಹರಿ ಅದನ್ನು ಸುಮಾರು ಎರಡರಷ್ಟು ಗಾತ್ರಕ್ಕೆ ಉಬ್ಬಿಸಿ ನೀರಸಗೊಳಿಸಿದ್ದಾನೆ. ಹಾಗೆಯೇ ಅತ್ಯಂತ ಪ್ರಭಾವಕಾರಿಯೂ ಮಾನವೀಯತೆಯ ಅಂತರಾಳದ ಪ್ರಬಲ ಅನಿಸಿಕೆಗಳ ಕ್ರಿಯೆಗಳ ಜ್ವಲಂತ ಸಮರ್ಥ ಚಿತ್ರಣವಿರುವ ಅಯೋಧ್ಯಾ ಕಾಂಡವನ್ನು ಅನುಚಿತವಾಗಿ ಹ್ರಸ್ವಗೊಳಿಸಿಬಿಟ್ಟಿದ್ದಾನೆ. ಯುದ್ಧಕಾಂಡವಂತೂ ಸಹನಾತೀತವಾಗಿ ಅಕ್ಷಮ್ಯವಾಗಿ ಲಂಬಿತವಾಗಿದೆ, ನಿಸ್ಸಾರವಾಗಿದೆ. ಸಂವಾದಗಳ ಮೂಲಕ ವಾಲ್ಮೀಕಿಯ ಪಾತ್ರಗಳಲ್ಲಿ ವ್ಯಕ್ತಗೊಳ್ಳುವ ಜೀವನ ಸಂಘರ್ಷ ಇಲ್ಲಿ ತೀರಾ ಸಪ್ಪೆಯಾಗಿದೆ. ಇಡೀ ಕೃತಿ ರಾಮಮಹಿಮಾಮಯವಾಗಿದ್ದು, ಸರಳ ನಿರೂಪಣೆಯಿಂದಾಗಿ ಸಾಮಾನ್ಯ ಜನಪ್ರಿಯತೆಯನ್ನು ಪಡೆಯಿತೆಂಬುದನ್ನು ಬಿಟ್ಟರೆ, ಇದರ ಕೊರತೆಗಳ ಪಟ್ಟಿಯನ್ನು ಹೀಗೇ ಬೆಳೆಸುತ್ತ ಹೋಗಬಹುದು.[೨]

ತೊರವೆ ರಾಮಾಯಣದ ಗದ್ಯಾನುವಾದವನ್ನು ಕೆ.ಎಸ್.ಕೃಷ್ಣಮೂರ್ತಿಯವರು ಮಾಡಿದ್ದಾರೆ.[೩]

ಉಲ್ಲೇಖಗಳು[ಬದಲಾಯಿಸಿ]

  1. https://spardhachetan.blogspot.com/2017/11/blog-post_59.html
  2. "ಆರ್ಕೈವ್ ನಕಲು". Archived from the original on 2018-10-05. Retrieved 2018-08-28.
  3. https://m.dailyhunt.in/Ebooks/kannada/kannada-kaavya-parampareya-parichaya-kumaara-vaalmiki-book-183315