ಟಿ.ಪಿ.ಕೈಲಾಸಂ
ತ್ಯಾಗರಾಜ ಪರಮಶಿವ ಕೈಲಾಸಂ ಕನ್ನಡದ ಜನರ ಮನ ಮನೆಗಳಲ್ಲಿ ಚಿರಕಾಲ ಉಳಿಯುವ, ಜನಪ್ರಿಯ ಹೆಸರು. ಇವರು ಕನ್ನಡ ರಂಗಭೂಮಿಗೆ ನೀಡಿದ ಕೊಡುಗೆ ಅಪಾರ. ಆಧುನಿಕ ರಂಗಭೂಮಿಯ ಹರಿಕಾರರೆಂದೇ ಕರೆಯಲ್ಪಟ್ಟ ಅವರ ಹಾಸ್ಯ ಚಟಾಕಿಗಳು ಇಂದಿಗೂ ಜನರನ್ನು ನಗಿಸುತ್ತಾ ನಲಿಸುತ್ತಾ ಇವೆ.
ಬಾಲ್ಯ [ಬದಲಾಯಿಸಿ]
ಕೈಲಾಸಂರವರು ತಮಿಳು ಮೂಲದ ಉನ್ನತ ಮಟ್ಟದ ಮನೆತನದಿಂದ ಬಂದವರು. ಅವರ ತಂದೆ ಆಗಿನ ಕಾಲಕ್ಕೆ ಬಹು ದೊಡ್ಡ ಹೆಸರು ಮಾಡಿದ್ದ ಜಸ್ಟಿಸ್ ಪರಮಶಿವ ಅಯ್ಯರ್, ತಾಯಿ ಕಮಲಮ್ಮ. ಬೆಂಗಳೂರಿನಲ್ಲಿ. ಹುಟ್ಟಿದ ಕೈಲಾಸಂ ಅವರ ಬಾಲ್ಯ ಜೀವನ ಅತ್ಯಂತ ಶಿಸ್ತಿನಿಂದ ಕಳೆಯಿತು. ವಿದ್ಯಾಭ್ಯಾಸ ನಡೆದುದು ಬೆಂಗಳೂರು, ಮೈಸೂರು, ಹಾಸನಗಳಲ್ಲಿ. ಮೆಟ್ರಿಕ್ಯುಲೇಷನ್ ಪಾಸು ಮಾಡಿದ್ದು ಮದರಾಸಿನ ಹಿಂದು ಹೈಸ್ಕೂಲಿನಲ್ಲಿ. ಮುಂದೆ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಭೂವಿಜ್ಞಾನ ಓದಿ ಬಿ.ಎ. ಪದವಿ. ಎಂ.ಎ.ಪದವಿಗಳನ್ನು ಪಡೆದು ಸರಕಾರದ ವಿದ್ಯಾರ್ಥಿವೇತನದೊಂದಿಗೆ ಲಂಡನ್ನಿಗೆ ತೆರಳಿ ರಾಯಲ್ ಕಾಲೇಜ್ ಆಫ್ ಸೈನ್ಸ್ ಸೇರಿ ಏಳು ವಿಷಯಗಳಲ್ಲಿ ಮೊದಲ ದರ್ಜೆಯಲ್ಲದೆ ಪ್ರಶಸ್ತಿಗೂ ಭಾಜನರಾದರು. ರಾಯಲ್ ಜಿಯಾಲಜಿಕಲ್ ಸೊಸೈಟಿಗೆ ಪ್ರಬಂಧ ಸಲ್ಲಿಸಿ ಫೆಲೋಷಿಪ್ ಪಡೆದರು. ಜ್ಞಾನಾರ್ಜನೆಯಂತೆ ಕ್ರೀಡೆಯಲ್ಲೂ ಆಸಕ್ತಿ. ಫುಟ್ಬಾಲ್ನಲ್ಲಿ ಅಜೇಯ ಗೋಲ್ ಕೀಪರ್. ಯೂಜಿನ್ ಸ್ಯಾಂಡೋರ ನೆಚ್ಚಿನ ಶಿಷ್ಯರಾಗಿ ವ್ಯಾಯಾಮ ಪಟುವಾಗಿ ಮೆರೆದರು.
ನಾಟಕಕಾರ [ಬದಲಾಯಿಸಿ]
ಇಂಗ್ಲೆಂಡಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಜಾರ್ಜ್ ಬರ್ನಾಡ್ ಶಾ ಅವರ ನಾಟಕಗಳು ಕೈಲಾಸಂರವರ ಮೇಲೆ ಅಪಾರ ಪ್ರಭಾವ ಬೀರಿದ್ದವು. ಅದೇ ತಂತ್ರಗಾರಿಕೆ ಬಳಸಿ ಹಲವು ನಾಟಕಗಳನ್ನು ರಚಿಸಿದರು. ರವೀಂದ್ರನಾಥರು ಬೆಂಗಳೂರಿಗೆ ಬಂದಾಗ ಅವರ ಸಮ್ಮುಖದಲ್ಲಿ ಪ್ರದರ್ಶಿಸಿದ ನಾಟಕ ಟೊಳ್ಳುಗಟ್ಟಿ ಪ್ರಥಮ ಬಹುಮಾನ ಗಳಿಸಿತಲ್ಲದೆ ಕನ್ನಡ ರಂಗಭೂಮಿಯಲ್ಲಿ ಕ್ರಾಂತಿ ಎಬ್ಬಿಸಿತು. ನಂತರ ೨೮ ವರ್ಷಗಳ ಅವಧಿಯಲ್ಲಿ ಹೋಂರೂಲು, ಬಹಿಷ್ಕಾರ, ಗಂಡಸ್ಕತ್ರಿ, ನಂಬ್ರಾಹ್ಮಣ್ಕೆ, ಬಂಡವಾಳವಿಲ್ಲದ್ಬಡಾಯಿ, ನಮ್ ಕ್ಲಬ್ಬು, ಅಮ್ಮಾವ್ರಗಂಡ, ಸತ್ತವನ ಸಂತಾಪ, ಅನುಕೂಲಕ್ಕೊಬ್ಬಣ್ಣ, ಸೀಕರ್ಣೆ ಸಾವಿತ್ರಿ, ಶೂರ್ಪನಖಾ ಕುಲವೈಭವ ಅಥವಾ ನಂಕಂಪ್ನಿ, ತಾಳಿ ಕಟ್ಟೋಕ್ಕೂಲೀನೇ, ಪೋಲಿಕಿಟ್ಟಿ, ವೈದ್ಯನವ್ಯಾಧಿ, ಸೂಳೆ ಮೊದಲಾದ ನಾಟಕಗಳ ಜೊತೆಗೆ ನಾಲ್ಕು ಇಂಗ್ಲಿಷ್ ನಾಟಕಗಳೂ ರಚನೆಯಾದವು. ತಾವರೆಕೆರೆ, ಸಮಶ್ಪೋಯಿನ ದಂಬ್ಡಿ, ಮುದ್ದೂ ಇಲ್ಲ ಕದ್ದೂ ಮೊದಲಾದ ೫ ಕಥೆಗಳು, ತಿಪ್ಪಾರಹಳ್ಳಿ, ಕೋಳೀಕೆ ರಂಗ ಮೊದಲ್ಗೊಂಡು ಏಳು ಹಾಡುಗಳು, ದಿ ಡ್ರಮಾಟಿಸ್ಟ್, ಎಟರ್ನಲ್ ಕೆಯಿನ್, ಟ್ರೂತ್ನೇಕೆಡ್ ಮುಂತಾದ ೧೫ ಇಂಗ್ಲಿಷ್ ಕವನಗಳು ಸಹ ಮೂಡಿಬಂದವು. ಕೈಲಾಸಂ ಎಂದೂ ಪೆನ್ನು ಹಿಡಿದವರಲ್ಲ. ಕನ್ನಡಾಂಗ್ಲಾ ಭಾಷೆಯಲ್ಲಿ ಹೇಳಿದ್ದನ್ನು ಸ್ನೇಹಿತರು ಬರೆದುಕೊಂಡರು.
ಕನ್ನಡಕ್ಕೊಬ್ನೆ ಕೈಲಾಸಂ [ಬದಲಾಯಿಸಿ]
ಕೈಲಾಸಂ ಅವರು ೧೯೪೫ರಲ್ಲಿ ಮದರಾಸಿನಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಅವರು ಮಾಡಿದ ಭಾಷಣ ಇಡೀ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಭಾಷಣಗಳಲ್ಲೆಲ್ಲಾ ಅತ್ಯಂತ ಚಿಕ್ಕದೆಂದು, ಜೊಕ್ಕವಾಗಿತ್ತೆಂದೂ ಪ್ರಸಿದ್ಧವಾಗಿದೆ. ಏಕೆಂದರೆ, ಅದರಲ್ಲಿ ಪದೇ ಪದೇ ಹೇಳಿದ್ದನ್ನೇ ಹೇಳುವ ಪರಿಪಾಠವಿರಲಿಲ್ಲ. ಪ್ರತಿಪದ, ಪ್ರತಿವಾಕ್ಯಗಳೂ ಮೊದಲೇ ನಿರ್ಧಾರಿತವಾಗಿದ್ದು, ಸಭಿಕರಿಗೆ ಮತ್ತು ಆ ದಿನದ ಸನ್ನಿವೇಶಕ್ಕೆ ಬೇಕಾದ್ದನ್ನು ಮಾತ್ರ ಹೇಳಿದ್ದರಿಂದ ಇದು ಎಲ್ಲರಿಗೂ ಅತ್ಯಂತ ಪ್ರಿಯವಾಯಿತು. ಅತಿ ಕ್ಲುಪ್ತ, ಮತ್ತು ಪ್ರಭಾವಿ ಭಾಷಣಕ್ಕೆ , ಮಾತುಕತೆಗೆ ಅವರು ಪ್ರಸಿದ್ಧರಾಗಿದ್ದರು. ಮೊದಲ ತಯಾರಿಯಿಲ್ಲದೆ ಯಾವ ಸಮಾರಂಭಕ್ಕೂ ಅವರು ಹೋಗುತ್ತಿರಲಿಲ್ಲ. 'ಕನ್ನಡಕ್ಕೊಬ್ನೆ ಕೈಲಾಸಂ’, ಎಂದು ಎಲ್ಲರ ಕೈಲೂ, ಭೇಷ್ ಎನ್ನಿಸಿಕೊಂಡ ಕೈಲಾಸಂ, ಕನ್ನಡ ಸಾರಸ್ವತ ಲೋಕಕ್ಕೆ ಕೊಟ್ಟ ಕೊಡುಗೆ ಅನನ್ಯ! ಯಾರೋ ಅವರನ್ನು ಸಂಬೋಧಿಸಿ, ಟಿ.ಪಿ.ಕೈಲಾಸ್,ಎಂದಾಗ ತಮ್ಮನ್ನು ತಾವೆ, ಟಿಪಿಕಲ್ ಆಸ್, ಎಂದು ಕರೆದುಕೊಂಡು, ನಗೆಯಾಡಿದ್ದರಂತೆ. ಪಾಶ್ಚಾತ್ಯ ಸಂಗೀತಾಸಕ್ತರಾಗಿ ಅವರು ಇಂಗ್ಲಿಷ್ ರಾಗಕ್ಕೆ ಕನ್ನಡದಲ್ಲಿ ಹಾಡು ಬರೆದು ಕೇಳುಗರಿಗೆ ಅಚ್ಚರಿ ಹುಟ್ಟಿಸುತ್ತಿದ್ದರಂತೆ. ಕೂತಲ್ಲಿ ಕಂಪನಿ…ನಿಂತಲ್ಲಿ ನಾಟ್ಕ ಎಂದು ಹೋದೆಡೆಯಲ್ಲೆಲ್ಲಾ ಜನರನ್ನು ನಕ್ಕು ನಗಿಸಿದ ಕೈಲಾಸಂ ನಿಜಜೀವನದ ರಂಗದಿಂದ ಮರೆಯಾದದ್ದು ೨೩.೧೧.೧೯೪೬ರಲ್ಲಿ.