ರಾಜ್ಕುಮಾರ್
ರಾಜ್ಕುಮಾರ್ | |
|---|---|
| ಹೆಸರು | ರಾಜ್ಕುಮಾರ್ |
| ಜನನ | ಸಿಂಗಾನಲ್ಲೂರು ಪುಟ್ಟಸ್ವಾಮಯ್ಯ ಮುತ್ತುರಾಜು ೨೪ ಏಪ್ರಿಲ್, ೧೯೨೯ |
| ನಿಧನ | 12 ಏಪ್ರಿಲ್ 2006 (ವಯಸ್ಸು - 76) |
| ಸ್ಮಾರಕಗಳು | ಕಂಠೀರವ ಸ್ಟುಡಿಯೋಸ್[೪] |
| ಇತರ ಹೆಸರುಗಳು | ರಾಜ್ಕುಮಾರ್, ಅಣ್ಣಾವ್ರು |
| ವೃತ್ತಿಗಳು | ನಟ, ಗಾಯಕ |
| ಸಕ್ರಿಯ ಅವಧಿ | 1954–2005 |
| ಪದವಿ | ನಟಸಾರ್ವಭೌಮ, ಕರ್ನಾಟಕ ರತ್ನ, ವರನಟ,ಅಣ್ಣಾವ್ರು |
| ಚಳವಳಿ | ಗೋಕಾಕ್ ಚಳುವಳಿ[೫] |
| ಜೀವನ ಸಂಗಾತಿ | ಪಾರ್ವತಮ್ಮ ರಾಜ್ಕುಮಾರ್ |
| ಮಕ್ಕಳು | ಶಿವರಾಜ್ಕುಮಾರ್ ಪುನೀತ್ ರಾಜ್ಕುಮಾರ್ ರಾಘವೇಂದ್ರ ರಾಜ್ಕುಮಾರ್ ಪೂರ್ಣಿಮ ಲಕ್ಷ್ಮಿ[೬] |
ಡಾ. ರಾಜ್ಕುಮಾರ್, ಅಣ್ಣಾವ್ರು ಎಂದೇ ಖ್ಯಾತರಾದ ಕನ್ನಡ ಚಲನಚಿತ್ರರಂಗ ಮತ್ತು ರಂಗಭೂಮಿಯ ಮೇರುನಟ. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಒಬ್ಬರು. ನಟನೆ, ಗಾಯನ ಮತ್ತು ಚಿತ್ರ ನಿರ್ಮಾಣದ ಮೂಲಕ ವರನಟ, ನಟಸಾರ್ವಭೌಮ ಮೊದಲಾದ ಬಿರುದುಗಳು ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಹಾಗೂ ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ ಪದವಿಯನ್ನು ಪಡೆದ ಮೊದಲ ನಟ.[೭][೮] ಭಾರತೀಯ ಚಿತ್ರರಂಗ ನೂರು ವರ್ಷ ಪೂರೈಸಿದ ಸಂದರ್ಭದಲ್ಲಿ ಫೋರ್ಬ್ಸ್ ಪತ್ರಿಕೆಯು ಪ್ರಕಟಿಸಿರುವ 25 ಅತ್ಯದ್ಭುತ ನಟನೆಗಳ ಪಟ್ಟಿಯಲ್ಲಿ ಡಾ. ರಾಜ್ ಕುಮಾರ್ ರವರ ಬಂಗಾರದ ಮನುಷ್ಯ ಚಿತ್ರದ ನಟನೆಯೂ ಒಂದಾಗಿದೆ.
[೯]In 2018, Dr. Girija, a researcher from the Janapada (Folklore) Department of Kannada University, Hampi, earned her Ph.D. for an in-depth study titled "Folk Elements in Dr. Rajkumar’s Films Based on Novels".Her work explores how folk culture, traditions, and narratives are interwoven into the cinematic adaptations of novels in which Dr. Rajkumar played key roles. This study is considered a significant academic contribution to the understanding of folk influence in Kannada cinema कुनाल .
ಜೀವನ
[ಬದಲಾಯಿಸಿ]- ನಟಸಾರ್ವಭೌಮ ಡಾ. ರಾಜ್ಕುಮಾರ್ (ಜನನ: ಏಪ್ರಿಲ್ ೨೪, ೧೯೨೯ - ಮರಣ: ಏಪ್ರಿಲ್ ೧೨, ೨೦೦೬) ಕನ್ನಡ ಚಿತ್ರರಂಗದ ಧ್ರುವತಾರೆ ಎಂದೇ ಹೆಸರಾದ ಪ್ರಸಿದ್ಧ ನಟ ಹಾಗೂ ಗಾಯಕ. ೧೯೫೪-೨೦೦೫ರವರೆಗೆ ೫ ದಶಕಗಳ ಚಿತ್ರರಂಗದ ಬದುಕಿನಲ್ಲಿ, ೨೦೦ ಕ್ಕೂ ಹೆಚ್ಚು ಚಿತ್ರಗಳಲ್ಲಿ ನಾಯಕನಾಗಿ ನಟಿಸಿದ ಹೆಗ್ಗಳಿಕೆ ಡಾ. ರಾಜ್ ರವರದ್ದು.
- ಕೇವಲ ನಟರಾಗಿ ಉಳಿಯದೆ ಹಿನ್ನೆಲೆ ಗಾಯಕರಾಗಿ ಸಹ ಹೆಸರು ಮಾಡಿದ್ದಾರೆ. ನಟಸಾರ್ವಭೌಮ ಬಿರುದು, ೧೯೭೩ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಹಾಗೂ ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ ಪದವಿಯನ್ನು ಪಡೆದಿದ್ದಾರೆ. ಭಾರತ ಸರ್ಕಾರದಿಂದ ಪದ್ಮಭೂಷಣ ಪ್ರಶಸ್ತಿ ಮತ್ತು ಚಿತ್ರರಂಗದಲ್ಲಿನ ಜೀವಮಾನದ ಸಾಧನೆಗಾಗಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗಳೂ ಸಹ ಲಭಿಸಿವೆ.
- ಕರ್ನಾಟಕ ಸರ್ಕಾರದಿಂದ ಕರ್ನಾಟಕ ರತ್ನ ಪಡೆದ ಎರಡನೆಯ ವ್ಯಕ್ತಿ. ೨೦೦೦ನೇ ವರ್ಷದಲ್ಲಿ ಕುಖ್ಯಾತ ದಂತಚೋರ ವೀರಪ್ಪನ್ನಿಂದ ಅಪಹರಣವಾಗಿದ್ದ ರಾಜ್ಕುಮಾರ್, ೧೦೮ ದಿನಗಳ ನಂತರ ಬಿಡುಗಡೆಯಾಗಿದ್ದರು. ೨೦೦೬ ಏಪ್ರಿಲ್ ೧೨ರಂದು ಬೆಂಗಳೂರಿನಲ್ಲಿ, ಹೃದಯಾಘಾತದಿಂದ ಮರಣ ಹೊಂದಿದರು.
ಹಿನ್ನೆಲೆ
[ಬದಲಾಯಿಸಿ]
ಕನ್ನಡ ರಂಗಭೂಮಿಯ ಹೆಸರಾಂತ ಪ್ರತಿಭೆ ಸಿಂಗನಲ್ಲೂರು ಪುಟ್ಟಸ್ವಾಮಯ್ಯ ಮತ್ತು ಲಕ್ಷ್ಮಮ್ಮ ದಂಪತಿಗಳ ಹಿರಿಯ ಮಗನಾಗಿ, ಚಾಮರಾಜನಗರ ಜಿಲ್ಲೆಯ ಗಡಿಭಾಗದಲ್ಲಿರುವ ದೊಡ್ಡ ಗಾಜನೂರಿನಲ್ಲಿ ೧೯೨೯ರ ಏಪ್ರಿಲ್ ೨೪ರಂದು ರಾಜ್ಕುಮಾರ್ ಜನ್ಮ ತಳೆದರು. ನಾಮಕರಣಗೊಂಡ ಹೆಸರು ಮುತ್ತುರಾಜು (ಮುತ್ತಣ್ಣ).
ಡಾ. ರಾಜ್ ರವರಿಗೆ ವರದರಾಜ್ ಎಂಬ ಸಹೋದರ ಮತ್ತು ಶಾರದಮ್ಮ ಎಂಬ ತಂಗಿಯು ಇದ್ದರು. ೧೯೫೩ ಜೂನ್ ೨೫ರಂದು ಪಾರ್ವತಿಯವರೊಡನೆ ಮದುವೆಯಾಗಿ ದಾಂಪತ್ಯ ಜೇವನಕ್ಕೆ ಕಾಲಿಟ್ಟರು. ಪಾರ್ವತಿಯವರು ಮುಂದೆ ಪಾರ್ವತಮ್ಮ ರಾಜ್ಕುಮಾರ್ ಎಂದೇ ಕನ್ನಡದ ಜನತೆಗೆ ಚಿರ ಪರಿಚಿತರಾಗಿ ಕನ್ನಡ ಚಿತ್ರರಂಗದ ಪ್ರಮುಖ ಚಿತ್ರ ನಿರ್ಮಾಪಕರಲ್ಲೊಬ್ಬರಾದರು. ಅವರು ವಜ್ರೇಶ್ವರಿ ಸಂಸ್ಥೆಯ ಅಡಿಯಲ್ಲಿ ಹಲವಾರು ಕನ್ನಡ ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ. ಡಾ. ರಾಜ್ ದಂಪತಿಗಳಿಗೆ ೫ ಜನ ಮಕ್ಕಳು. ಮೂರು ಗಂಡು ಮಕ್ಕಳು ಮತ್ತು ಎರಡು ಹೆಣ್ಣು ಮಕ್ಕಳು. ಗಂಡು ಮಕ್ಕಳಾದ ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಮತ್ತು ಪುನೀತ್ ರಾಜ್ಕುಮಾರ್ ಕನ್ನಡ ಚಿತ್ರರಂಗದ ನಾಯಕ ನಟರು. ಹೆಣ್ಣು ಮಕ್ಕಳ ಹೆಸರು ಪೂರ್ಣಿಮಾ ಹಾಗು ಲಕ್ಷ್ಮಿ. ಹಿರಿಯ ಅಳಿಯ ಪಾರ್ವತಮ್ಮನವರ ತಮ್ಮನಾದ ಗೋವಿಂದರಾಜು ಹಾಗು ಕಿರಿಯ ಅಳಿಯ ಚಿತ್ರನಟ ರಾಮ್ಕುಮಾರ್. ಒಟ್ಟು ಹನ್ನೆರಡು ಮೊಮ್ಮಕ್ಕಳಿದ್ದು, ಶಿವರಾಜ್ಕುಮಾರ್ ಪುತ್ರಿಯಾದ ನಿವೇದಿತಾ, ಅಂಡಮಾನ್ ಮುಂತಾದ ಕೆಲವು ಚಿತ್ರಗಳಲ್ಲಿ ಬಾಲನಟಿಯಾಗಿ ನಟಿಸಿದ್ದಾಳೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪನವರು ಡಾ. ರಾಜ್ ಅವರ ಬೀಗರು. ಬಂಗಾರಪ್ಪನವರ ಪುತ್ರಿಯಾದ ಗೀತಾ, ಶಿವರಾಜ್ಕುಮಾರ್ ರವರ ಪತ್ನಿ.
ಅಪಹರಣ
[ಬದಲಾಯಿಸಿ]- ೩೦ ಜುಲೈ ೨೦೦೦ರಂದು, ಕುಖ್ಯಾತ ದಂತಚೋರ, ನರಹಂತಕ ವೀರಪ್ಪನ್ನಿಂದ ಡಾ. ರಾಜ್ ರವರು ಗಾಜನೂರಿನಲ್ಲಿರುವ ತಮ್ಮ ತೋಟದ ಮನೆಯಿಂದ ಅಪಹರಣವಾದರು. ಡಾ. ರಾಜ್ ರವರೊಂದಿಗೆ ಅವರ ಅಳಿಯ ಗೋವಿಂದರಾಜು ಮತ್ತು ನಾಗಪ್ಪ ಮಾರಡಗಿಯವರೂ ಕೂಡ ಅಪಹರಣಕ್ಕೊಳಗಾದರು.
- ಡಾ. ರಾಜ್ ರವರನ್ನು ಒತ್ತೆಯಾಳಗಿಟ್ಟುಕೊಂಡು, ಅಪಹರಣದ ನಂತರದ ದಿನಗಳಲ್ಲಿ, ವೀರಪ್ಪನ್ ಕ್ಯಾಸೆಟ್ ಗಳ ಮೂಲಕ, ಪತ್ರಗಳ ಮೂಲಕ ಕರ್ನಾಟಕ ಹಾಗು ತಮಿಳುನಾಡು ಸರ್ಕಾರಗಳನ್ನು ಸಂಪರ್ಕಿಸುತ್ತ, ಹಲವಾರು ಬೇಡಿಕೆಗಳನ್ನು ಮುಂದಿಟ್ಟಿದ್ದನು. ನೂರೆಂಟು ದಿನಗಳ ಕಾಲ ಅಪಹೃತರಾಗಿ, ಅರಣ್ಯವಾಸ ಅನುಭವಿಸಿದ್ದ ಡಾ. ರಾಜ್, ೧೫ ನವೆಂಬರ್ ೨೦೦೦ರಂದು ಬಿಡುಗಡೆಗೊಂಡರು.
- ಅಪಹರಣದ ಅವಧಿಯಲ್ಲಿ ಕರ್ನಾಟಕದ ಪೋಲಿಸ್ ಮಹಾನಿರ್ದೇಶಕರಾದ(ಡಿಜಿಪಿ) ಪಿ. ದಿನಕರ್ ಅವರು ಅಪಹರಣದ ಬಗ್ಗೆ "Veerappan's Prize Catch: Dr.Rajkumar" ಎಂಬ ಪುಸ್ತಕವನ್ನು ಬರೆದಿದ್ದಾರೆ. ಆ ಪುಸ್ತಕವನ್ನು ರವಿ ಬೆಳಗೆರೆ ಯವರು "ರಾಜ ರಹಸ್ಯ" ಎಂಬ ಹೆಸರಿನಲ್ಲಿ ಕನ್ನಡಕ್ಕೆ ಅನುವಾದಿಸಿದ್ದಾರೆ.
ನಿಧನ
[ಬದಲಾಯಿಸಿ]
- ಅಂತಿಮ ದಿನಗಳಲ್ಲಿ ಮಂಡಿನೋವು ಹಾಗು ಎದೆನೋವಿನಿಂದ ಬಳಲಿದ ಡಾ. ರಾಜ್, ೧೨ ಏಪ್ರಿಲ್, ೨೦೦೬ ಬುಧವಾರದಂದು ಮಧ್ಯಾಹ್ನ ೧:೪೫ರ ಸುಮಾರಿಗೆ, ಬೆಂಗಳೂರಿನಲ್ಲಿ ತಮ್ಮ ಕೊನೆಯುಸಿರೆಳೆದರು. ಕನ್ನಡ ಚಿತ್ರರಂಗದ ದಂತಕಥೆಯಾಗಿದ್ದ ಡಾ. ರಾಜ್ ರವರ ಅಗಲಿಕೆಯಿಂದ, ಒಂದು ಸುವರ್ಣ ಯುಗದ ಅಂತ್ಯವಾದಂತಾಯಿತು.
- ಡಾ. ರಾಜ್ ರವರ ಸ್ವ-ಇಚ್ಛೆಯಂತೆ, ಮರಣೋತ್ತರವಾಗಿ ಅವರ ಕಣ್ಣುಗಳನ್ನು ನಾರಾಯಣ ನೇತ್ರಾಲಯಕ್ಕೆ ದಾನ ಮಾಡಲಾಯಿತು. ಅವರ ಪಾರ್ಥಿವ ಶರೀರವನ್ನು ಅಭಿಮಾನಿಗಳ, ಬಂಧುಮಿತ್ರರ ದರ್ಶನಕ್ಕಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಡಲಾಗಿತ್ತು. ಅಪಾರ ಸಂಖ್ಯೆಯ ಜನಸ್ತೋಮ ಅಂತಿಮ ದರ್ಶನದಲ್ಲಿ ಪಾಲ್ಗೊಂಡಿತ್ತು.
- ೧೩ ಏಪ್ರಿಲ್ ೨೦೦೬ ರಂದು, ಬೆಂಗಳೂರಿನ ನಂದಿನಿ ಲೇಔಟ್ನಲ್ಲಿರುವ ಕಂಠೀರವ ಸ್ಟುಡಿಯೊ ಆವರಣದಲ್ಲಿ ಡಾ. ರಾಜ್ ರವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರವು ನಡೆಯಿತು. ಇವೆರಡು ದಿನ (ಏಪ್ರಿಲ್ ೧೨ ಮತ್ತು ೧೩), ಬೆಂಗಳೂರಿನಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಉಂಟಾಗಿತ್ತು.
ಬಣ್ಣದ ಬದುಕು
[ಬದಲಾಯಿಸಿ]ರಂಗಭೂಮಿ ಮತ್ತು ತಂದೆಯ ಪ್ರಭಾವ
[ಬದಲಾಯಿಸಿ]- ಬೇಡರ ಕಣ್ಣಪ್ಪ ಚಿತ್ರದಲ್ಲಿ ನಾಯಕನಾಗಿ ನಟಿಸುವ ಮುನ್ನ ಡಾ. ರಾಜ್ ರವರ ಹೆಸರು ಮುತ್ತುರಾಜ ಎಂದಿತ್ತು. ಮುತ್ತುರಾಜನ ತಂದೆ ಸಿಂಗಾನಲ್ಲೂರು ಪುಟ್ಟಸ್ವಾಮಯ್ಯ[೧೦] ನವರು ೧೯೩೦-೧೯೫೦ ಕಾಲದಲ್ಲಿ ಕನ್ನಡ ರಂಗಭೂಮಿಯ ದೊಡ್ಡ ಹೆಸರು. ರೌದ್ರ ಪಾತ್ರಗಳಿಗೆ ಹೆಸರಾಗಿದ್ದ ಪುಟ್ಟಸ್ವಾಮಯ್ಯರವರು ಗುಬ್ಬಿ ಕಂಪನಿಯಲ್ಲಿ ಕಲಾವಿದರಾಗಿದ್ದರು. ಬಡತನದಿಂದಾಗಿ ಮುತ್ತುರಾಜ್ ನ ವಿದ್ಯಾಭ್ಯಾಸ ನಾಲ್ಕನೆ ತರಗತಿಗೆ ನಿಂತಿತ್ತು.
- ಗುಬ್ಬಿ ಕಂಪನಿಯೇ ವಿಶ್ವವಿದ್ಯಾನಿಲಯವಾಯಿತು. ತಂದೆಯನ್ನು ನೆರಳಿನಂತೆ ಹಿಂಬಾಲಿಸಿದ ಮುತ್ತು ರಾಜ್ಗೆ ಅವರಿಂದಲೇ ತರಬೇತಿಯಾಯಿತು. ನಾಟಕಗಳಲ್ಲಿ ಸಣ್ಣ ಪುಟ್ಟ ಪಾತ್ರ ನಿರ್ವಹಿಸುತ್ತಿದ್ದರು. ಡಾ. ರಾಜ್ಕುಮಾರ್ ಜೀವನದಲ್ಲಿ ತಂದೆ ಬೀರಿರುವ ಪ್ರಭಾವ ಅಪಾರ. ಫಾಲ್ಕೆ ಪ್ರಶಸ್ತಿ ಪ್ರಕಟವಾದಾಗ ಅವರು ಮೊದಲು ನೆನಪಿಸಿಕೊಂಡದ್ದು ತಂದೆ ಹೇಳಿದ ಮಾತುಗಳನ್ನೇ:"ಇಂತಹ ಸಾಧನೆ ನಿನ್ನಿಂದ ಸಾಧ್ಯ" ಎಂದು ಪುಟ್ಟಸ್ವಾಮಯ್ಯ ಮಗನ ಭವಿಷ್ಯವನ್ನು ಅಂದೇ ನುಡಿದಿದ್ದರು. ಅದು ನಿಜವಾಯಿತು.
- "ನನ್ನ ತಂದೆ ರಂಗದ ಮೇಲೆ ಹುರಿ ಮೀಸೆ ತಿರುಗಿಸುತ್ತಾ, ಆರ್ಭಟಿಸುತ್ತಾ ರಂಗ ಪ್ರವೇಶಿಸಿದರೆಂದರೆ ಎಂತಹವರಿಗೂ ಒಂದು ಬಾರಿ ನಡುಕ ಬರುತ್ತಿತ್ತು" ಎಂದು ತಂದೆಯವರ ಅಭಿನಯವನ್ನು ಬಣ್ಣಿಸುವ ರಾಜ್ಕುಮಾರ್ ಅವರಿಗೆ ತಂದೆಯ ಅಭಿನಯ ಬಲು ಪ್ರಿಯ. "ನಾನೂ ಅದೇ ರೀತಿ ಮಾಡಬೇಕೆಂದು ಭಕ್ತ ಪ್ರಹ್ಲಾದ ಚಿತ್ರದಲ್ಲಿ ಹಿರಣ್ಯ ಕಶಿಪು ಪಾತ್ರದಲ್ಲಿ ಅವರಂತೆ ಅಭಿನಯಿಸಲು ಸಾಧ್ಯವೇ ಎಂದು ಪ್ರಯತ್ನಿಸಿದೆ; ಆದರೆ ಬರಲಿಲ್ಲ" ಎಂದು ಹೇಳಿದ್ದಾರೆ.
- ಗುಬ್ಬಿ ಕಂಪನಿಯಲ್ಲಿ ಪುಟ್ಟಸ್ವಾಮಯ್ಯನವರು ಅಭಿನಯಿಸುತ್ತಿದ್ದಾಗ ಮುತ್ತುರಾಜುವಿಗೆ "ಕೃಷ್ಣಲೀಲಾ" ಎಂಬ ನಾಟಕದಲ್ಲಿ ಸಣ್ಣ ಪಾತ್ರ ದೊರಕಿತು. ಕೆಲವು ದಿನಗಳ ನಂತರ ಪುಟ್ಟಸ್ವಾಮಯ್ಯನವರು ಗುಬ್ಬಿ ಕಂಪನಿ ತೊರೆದು ಎಂ.ವಿ.ಸುಬ್ಬಯ್ಯ ನಾಯ್ಡುರವರ ಶ್ರೀ ಸಾಹಿತ್ಯ ಸಾಮ್ರಾಜ್ಯ ನಾಟಕ ಮಂಡಳಿಗೆ ಸೇರಿದಾಗ ಅಕಸ್ಮಾತ್ತಾಗಿ ಮುತ್ತುರಾಜ್ಗೆ "ಅಂಬರೀಷ" ನಾಟಕದಲ್ಲಿ ಅಂಬರೀಷನ ತಮ್ಮ ರಮಾಕಾಂತನ ಪಾತ್ರ ದೊರಕಿತು.
- ಅನಂತರ "ಕುರುಕ್ಷೇತ್ರ" ನಾಟಕದಲ್ಲಿ ತಂದೆಯದು ಭೀಮನ ಪಾತ್ರವಾದರೆ ಮಗನದು ಅರ್ಜುನನ ಪಾತ್ರ. ರಾಜ್ಕುಮಾರ್ಗೆ ಇದು ರಂಗ ತಾಲೀಮು. ೧೯೫೧ರಲ್ಲಿ ತಂದೆ ಪುಟ್ಟಸ್ವಾಮಯ್ಯನವರ ನಿಧನ. ಬಂದೆರಗಿದ ಅಘಾತದಿಂದ ತತ್ತರಿಸಿದ ಮುತ್ತುರಾಜ್, ಮತ್ತೆ ಗುಬ್ಬಿ ಕಂಪನಿ ಸೇರಿ "ಭೂ ಕೈಲಾಸ" ನಾಟಕದಲ್ಲಿ ಅಭಿನಯಿಸಿದರು. ಗುಬ್ಬಿ ಕಂಪನಿ ಅಲ್ಲದೆ, ಶ್ರೀ ಸಾಹಿತ್ಯ ಮಂಡಲಿ, ಶೇಷಾಚಾರ್ಯರ ಶೇಷಕಮಲ ನಾಟಕ ಮಂಡಳಿಯಲ್ಲಿಯೂ ರಾಜ್ಕುಮಾರ್ ಒಂದು ವರ್ಷ ಸೇವೆ ಸಲ್ಲಿಸಿದ್ದಾರೆ.
ಚಿತ್ರರಂಗಕ್ಕೆ ನಾಯಕನಾಗಿ ಪಾದಾರ್ಪಣೆ
[ಬದಲಾಯಿಸಿ]- ೧೯೪೨ರಲ್ಲಿ ಬಿಡುಗಡೆಯಾದ ಭಕ್ತ ಪ್ರಹ್ಲಾದ ಚಿತ್ರದಲ್ಲಿ ನಟನಾಗಿಯೂ, ೧೯೫೨ರಲ್ಲಿ ಬಿಡುಗಡೆಯಾದ ಶಂಕರ್ಸಿಂಗ್ ನಿರ್ದೇಶನದ ಶ್ರೀ ಶ್ರೀನಿವಾಸ ಕಲ್ಯಾಣ ಚಿತ್ರದಲ್ಲಿ ಸಪ್ತರ್ಷಿಗಳಲ್ಲಿ ಒಬ್ಬರಾಗಿ ಅಭಿನಯಿಸಿದ್ದ ಮುತ್ತುರಾಜ್, ರಂಗಭೂಮಿಯಲ್ಲಿ ಸಕ್ರಿಯರಾಗಿದ್ದರು.
- ೧೯೫೩ರಲ್ಲಿ ಆಗಷ್ಟೆ ಮದುವೆಯಾಗಿದ್ದ ಮುತ್ತುರಾಜ್ ದಂಪತಿಗಳು ನಂಜನಗೂಡಿನಿಂದ ಮೈಸೂರಿಗೆ ಹೊರಡಲು ರೈಲ್ವೆ ನಿಲ್ದಾಣದಲ್ಲಿದ್ದರು. ಅದೇ ಸಮಯಕ್ಕೆ ಹೆಚ್.ಎಲ್.ಎನ್.ಸಿಂಹ ಕೂಡ ಮೈಸೂರಿಗೆ ಹೋಗಲು ಅಲ್ಲಿಗೆ ಬಂದಿದ್ದರು. ಅವರು ಮುತ್ತು ರಾಜ್ರವರನ್ನು ಚಿಕ್ಕಂದಿನಿಂದ ನೋಡಿದ್ದರು. ಅಂದು ರೈಲ್ವೆ ನಿಲ್ದಾಣದಲ್ಲಿ ಆ ದಂಪತಿಗಳನ್ನು ಕಂಡು ಪ್ರೀತಿಯಿಂದ ಮಾತನಾಡಿಸಿ, ಯೋಗಕ್ಷೇಮ ವಿಚಾರಿಸಿದರು.
- ಸಿಂಹನವರು ಕಣ್ಣಪ್ಪನ ಪಾತ್ರಕ್ಕೆ ಹೊಸನಟನನ್ನು ಹುಡುಕುತ್ತಿದ್ದ ಸಮಯವದು. ಅಂದು ಕಟ್ಟುಮಸ್ತಾದ ಆಳು ಮುತ್ತರಾಜ್ರವರನ್ನು ಕಂಡ ತಕ್ಷಣ "ಇವನನ್ನೇ ಕಣ್ಣಪ್ಪನಾಗಿ ಏಕೆ ಮಾಡಬಾರದು" ಎಂಬ ಭಾವನೆ ಅವರಲ್ಲಿ ಮೂಡಿತ್ತು. ಮುತ್ತುರಾಜ್ ಬಳಿ ವಿಳಾಸವನ್ನು ಪಡೆದು, ದಂಪತಿಗಳಿಗೆ ಶುಭ ಕೋರಿ ಸಿಂಹ ಬೀಳ್ಕೊಟ್ಟಿದ್ದರು. ಮೇಲಿನ ಘಟನೆ ನಡೆದ ಕೆಲವೇ ದಿನಗಳಲ್ಲಿ ಮೈಸೂರಿನ ಟೌನ್ಹಾಲಿನಲ್ಲಿ ಬೇಡರ ಕಣ್ಣಪ್ಪ ನಾಟಕ ಪ್ರದರ್ಶನವಿತ್ತು. ಅದರಲ್ಲಿ ಮುತ್ತುರಾಜ್ ಕಣ್ಣಪ್ಪನ ಪಾತ್ರ ವಹಿಸುತ್ತಾರೆ ಎಂದು ಸಿಂಹನವರಿಗೆ ತಿಳಿಯಿತು. * ಆ ದಿನ, ಅರ್ಧಗಂಟೆ ನಾಟಕ ನೋಡಿ, ಮುತ್ತುರಾಜ್ರವರ ತನ್ಮಯತೆಯ ಅಭಿನಯ ಕಂಡು ಸಿಂಹ ಸಂತೋಷ ಪಟ್ಟರು. ಗುಬ್ಬಿ ಕರ್ನಾಟಕ ಫಿಲಂಸ್ ನಿರ್ಮಿಸುತ್ತಿದ್ದ ಬೇಡರ ಕಣ್ಣಪ್ಪ ಚಿತ್ರದಲ್ಲಿನ ಕಣ್ಣಪ್ಪನ ಪಾತ್ರಕ್ಕೆ ಈತನೇ ಸರಿಯಾದ ವ್ಯಕ್ತಿ ಎಂದುಕೊಂಡು ನಿರ್ಮಾಪಕ ಎ.ವಿ.ಎಂ.ಚೆಟ್ಟಿಯಾರ್ ಅವರನ್ನು ಸಂಪರ್ಕಿಸಿ, ಆ ಚಿತ್ರದ ಸಹ ನಿರ್ಮಾಪಕರಾಗಿದ್ದ ಗುಬ್ಬಿ ವೀರಣ್ಣನವರಿಗೆ ಈ ವಿಷಯ ತಿಳಿಸಿ ಅವರನ್ನು ಒಪ್ಪಿಸಿದರು.
- ನಂತರ ಮುತ್ತುರಾಜ್ ಜಿ.ವಿ.ಅಯ್ಯರ್ ಹಾಗು ನರಸಿಂಹರಾಜು ಇವರುಗಳನ್ನು 'ಸ್ಕ್ರೀನ್ ಟೆಸ್ಟ್' ಗೆ ಮದರಾಸಿಗೆ ಬರಲು ಆಹ್ವಾನಿಸಿದರು.ನಿರ್ದೇಶಕ ಎಚ್.ಎಲ್.ಎನ್.ಸಿಂಹ ರವರಿಂದ ಮುತ್ತುರಾಜ್ಗೆ-ರಾಜಕುಮಾರ್ ಎಂಬ ಹೊಸ ಹೆಸರಿನ ನಾಮಕರಣವಾಯಿತು. ರಾಜಕುಮಾರ್ ಬೇಡರ ಕಣ್ಣಪ್ಪ ಚಿತ್ರದ ನಾಯಕನಾಗಿ ಅಭಿನಯಿಸಿದರು.
- ಚಿತ್ರವು ೧೯೫೪ರ ಮೇ ತಿಂಗಳಲ್ಲಿ ಆಗಿನ ಮೈಸೂರು ರಾಜ್ಯದಲ್ಲಿ ಎಲ್ಲೆಡೆ ಬಿಡುಗಡೆಗೊಂಡಿತು. ಬೇಡರ ಕಣ್ಣಪ್ಪ ಚಿತ್ರ ರಾಷ್ಟ್ರಪ್ರಶಸ್ತಿ ಪಡೆದ ಪ್ರಥಮ ಚಿತ್ರವಾಗಿ ಕನ್ನಡ ಚಿತ್ರರಂಗದಲ್ಲಿಯೇ ಒಂದು ಮೈಲಿಗಲ್ಲಾಯಿತು. ಮದರಾಸಿನಲ್ಲಿ 'ಸ್ಕ್ರೀನ್ ಟೆಸ್ಟ್' ನೋಡಿದ ನಿರ್ಮಾಪಕ ಎ.ವಿ.ಎಂ.ಚೆಟ್ಟಿಯಾರ್ ರವರು ಹೆಚ್.ಎಲ್.ಎನ್.ಸಿಂಹ ರವರ ಬಳಿ ಹೋಗಿ " ಈ ಉದ್ದ ಮೂಗಿನ ಮತ್ತು ಹಲ್ಲು ಹುಬ್ಬು ಇರುವವರನ್ನು ಹಾಕಿಕೊಂಡು ಏನು ಚಿತ್ರ ಮಾಡುತ್ತೀಯ ಎಂದು ಕೇಳಿದ್ದರಂತೆ. ಆದರೆ ಹೆಚ್.ಎಲ್.ಎನ್.ಸಿಂಹನವರು ನಿರ್ಮಾಪಕರಿಗೆ ಎ.ವಿ.ಎಂ.ಚೆಟ್ಟಿಯಾರ್, ಇವರೇ ಸರಿಯಾದ ವ್ಯಕ್ತಿಗಳು ಎಂದು ಹೇಳಿ ಒಪ್ಪಿಸಿದ್ದರು.
ಬಣ್ಣದ ಬದುಕಿನ ಪಕ್ಷಿನೋಟ
[ಬದಲಾಯಿಸಿ]- ಬೇಡರ ಕಣ್ಣಪ್ಪ ಚಿತ್ರದಿಂದ ನಾಯಕ ನಟನಾಗಿ ಅಭಿನಯಿಸಲು ಪ್ರಾರಂಭಿಸಿದ ರಾಜಕುಮಾರ್, ಭಕ್ತ ವಿಜಯ, ಹರಿಭಕ್ತ, ಓಹಿಲೇಶ್ವರ, ಭೂಕೈಲಾಸ, ಭಕ್ತ ಕನಕದಾಸ, ನವಕೋಟಿ ನಾರಾಯಣ(ಭಕ್ತ ಪುರಂದರದಾಸ) ಮುಂತಾದ ಭಕ್ತಿ ಪ್ರಧಾನ ಚಿತ್ರಗಳಲ್ಲಿ ಅಭಿನಯಿಸಿದರು. ೨೦೦ ಚಿತ್ರಗಳಲ್ಲಿ ನಾಯಕನಾಗಿ ಅಭಿನಯಿಸಿದ ಕನ್ನಡದ ಏಕೈಕ ಕಲಾವಿದರು.
- ೧೯೬೦ರ ದಶಕದಲ್ಲಿ, ಕಣ್ತೆರೆದು ನೋಡು, ಗಾಳಿಗೋಪುರ, ನಂದಾದೀಪ, ಸಾಕು ಮಗಳು, ನಾಂದಿ ಮುಂತಾದ ಸಾಮಾಜಿಕ ಚಿತ್ರಗಳಲ್ಲಿಯೂ, ರಣಧೀರ ಕಂಠೀರವ, ಕಿತ್ತೂರು ಚೆನ್ನಮ್ಮ, ಇಮ್ಮಡಿ ಪುಲಿಕೇಶಿ, ಶ್ರೀ ಕೃಷ್ಣದೇವ ರಾಯ ಮುಂತಾದ ಐತಿಹಾಸಿಕ ಚಿತ್ರಗಳು ರಾಜ್ ಅಭಿನಯದಲ್ಲಿ ತೆರೆ ಕಂಡವು.
- ೧೯೬೬ರಲ್ಲಿ ಬಿಡುಗಡೆಯಾದ ಸಂಗೀತ ಪ್ರಧಾನ ಸಂಧ್ಯಾರಾಗ ಚಿತ್ರದಲ್ಲಿ ಶಾಸ್ತ್ರೀಯ ಸಂಗೀತಗಾರನಾಗಿ ನಟಿಸಿದ ರಾಜ್ ರವರ ಅಭಿನಯಕ್ಕೆ ಭಾರತದ ಹೆಸರಾಂತ ಶಾಸ್ತ್ರೀಯ ಗಾಯಕರಾದ ಡಾ.ಬಾಲಮುರಳಿ ಕೃಷ್ಣ ಹಾಗು ಪಂಡಿತ್ ಭೀಮಸೇನ ಜೋಷಿಯವರು ಹಾಡಿದ್ದಾರೆ.
- ಇದೇ ವರ್ಷ ತೆರೆಕಂಡ ಮಂತ್ರಾಲಯ ಮಹಾತ್ಮೆ ಚಿತ್ರದಲ್ಲಿ ರಾಜ್ಕುಮಾರ್ ಶ್ರೀ ರಾಘವೇಂದ್ರ ಸ್ವಾಮಿಗಳ ಪಾತ್ರದಲ್ಲಿ ನಟಿಸಿದ್ದು, ಈ ಚಿತ್ರದಲ್ಲಿನ ಅಭಿನಯ ತಮ್ಮ ಚಿತ್ರ ಬದುಕಿನಲ್ಲಿ ಮಿಕ್ಕೆಲ್ಲ ಚಿತ್ರಗಳಿಗಿಂತಲೂ ಹೆಚ್ಚು ತೃಪ್ತಿಕರ ಎಂದು ಹಲವಾರು ಬಾರಿ ಸಂದರ್ಶನಗಳಲ್ಲಿ ತಿಳಿಸಿದ್ದಾರೆ.
- ೧೯೬೮ರಲ್ಲಿ ಬಿಡುಗಡೆಯಾದ ಜೇಡರ ಬಲೆ ಎಂಬ ಚಿತ್ರದ ಮೂಲಕ ಜೇಮ್ಸ್ ಬಾಂಡ್ ಮಾದರಿಯ ಗೂಢಚಾರಿ ಪಾತ್ರವನ್ನಾಧರಿಸಿದ ಚಿತ್ರಸರಣಿಗೆ ನಾಂದಿ ಹಾಡಿದರು. ಈ ಸರಣಿ ಯಲ್ಲಿ 'ಪ್ರಕಾಶ್' ಎಂಬ ಏಜೆಂಟ್ ಹೆಸರಿನಲ್ಲಿ (ಏಜೆಂಟ್ ೯೯೯) ಅಭಿನಯಿಸಿದರು. ಈ ಸರಣಿಯಲ್ಲಿನ ಇತರ ಚಿತ್ರಗಳೆಂದರೆ ಆಪರೇಷನ್ ಜಾಕ್ಪಾಟ್ನಲ್ಲಿ ಸಿ.ಐ.ಡಿ. ೯೯೯, ಗೋವಾದಲ್ಲಿ ಸಿ.ಐ.ಡಿ. ೯೯೯ ಹಾಗು ಆಪರೇಷನ್ ಡೈಮಂಡ್ ರಾಕೆಟ್. ಇವಲ್ಲದೇ ಸಿ.ಐ.ಡಿ. ರಾಜಣ್ಣ ಚಿತ್ರದಲ್ಲಿ ಸಿ.ಐ.ಡಿ ಯಾಗಿ ರಾಜ್ ಅಭಿನಯಿಸಿದ್ದಾರೆ.
- ರಾಜ್ಕುಮಾರ್ ರವರ ನೂರನೇ ಚಿತ್ರವಾದ ಭಾಗ್ಯದ ಬಾಗಿಲು ೧೯೬೮ರಲ್ಲಿ ತೆರೆ ಕಂಡಿತು. ಇದೇ ಸಂದರ್ಭದಲ್ಲಿ ಇವರಿಗೆ ನಟಸಾರ್ವಭೌಮ ಎಂಬ ಬಿರುದನ್ನು ನೀಡಿ ಗೌರವಿಸಲಾಯಿತಲ್ಲದೆ, ಅದೇ ಹೆಸರಿನ ಚಲನಚಿತ್ರವೂ (ನಟಸಾರ್ವಭೌಮ) ಕೂಡ ತಯಾರಾಯಿತು. ಈ ಚಿತ್ರವು ರಾಜ್ಕುಮಾರ್ ರವರ ಹಿಂದಿನ ನೂರು ಚಿತ್ರಗಳ ತುಣುಕು ದೃಶ್ಯಗಳನ್ನು ಜೊತೆಗೂಡಿಸಿ ತಯಾರಿಸುವ ಯೋಜನೆಯೊಂದಿಗೆ ಪ್ರಾರಂಭವಾದರೂ, ಸ್ಥಳಾವಕಾಶದ ಕೊರತೆಯಿಂದ ಕೆಲವು ಚಿತ್ರಗಳ ತುಣುಕುಗಳನ್ನು ಕೈಬಿಡಲಾಗಿದೆ.
- ೧೯೭೧ರಲ್ಲಿ ಬಿಡುಗಡೆಯಾದ ಕಸ್ತೂರಿ ನಿವಾಸ ಮತ್ತು ಸಾಕ್ಷಾತ್ಕಾರ ಚಿತ್ರಗಳು ರಾಜ್ ರವರ ಜನಪ್ರಿಯ ಚಿತ್ರಗಳಲ್ಲಿ ಮುಖ್ಯವಾದವು. ಕಸ್ತೂರಿ ನಿವಾಸ ಚಿತ್ರದ ಆಡಿಸಿನೋಡು ಬೀಳಿಸಿ ನೋಡು ಉರುಳಿ ಹೋಗದು ಹಾಗು ಸಾಕ್ಷಾತ್ಕಾರ ಚಿತ್ರದ ಒಲವೆ ಜೀವನ ಸಾಕ್ಷಾತ್ಕಾರ ಹಾಡುಗಳು ಜನಮನಗಳಲ್ಲಿ ವಿಶೇಷ ಸ್ಥಾನ ಪಡೆದ ಗೀತೆಗಳಾಗಿವೆ.
- ರಾಜ್ಕುಮಾರ್ ರವರನ್ನು ಖ್ಯಾತಿಯ ಉತ್ತುಂಗಕ್ಕೇರಿಸಿದ ಚಿತ್ರ ೧೯೭೧ರಲ್ಲಿ ತೆರೆಕಂಡ ಬಂಗಾರದ ಮನುಷ್ಯ. ಚಿತ್ರಮಂದಿರದಲ್ಲಿ ಸತತವಾಗಿ ಎರಡು ವರ್ಷಕ್ಕೂ ಹೆಚ್ಚಿನ ಅವಧಿಯ ಪ್ರದರ್ಶನಗೊಂಡು ಹೊಸ ದಾಖಲೆಯನ್ನು ನಿರ್ಮಿಸಿತು. ಈ ದಾಖಲೆ ಕನ್ನಡ ಚಿತ್ರರಂಗದಲ್ಲಿ ಇಂದಿಗೂ ಅಚ್ಚಳಿಯದೇ ನಿಂತಿದೆ. ಈ ಚಿತ್ರದಲ್ಲಿನ ರಾಜ್ ಅಭಿನಯದ ರಾಜೀವಪ್ಪ ಎಂಬ ಪಾತ್ರವು ಕನ್ನಡ ಚಿತ್ರರಂಗದಲ್ಲಿನ ಅತ್ಯಂತ ಖ್ಯಾತ ಪಾತ್ರಗಳಲ್ಲಿ ಒಂದಾಗಿ ಹೆಸರು ಪಡೆಯಿತು.
- ರಾಜ್ಕುಮಾರ್ ರವರ ನೂರೈವತ್ತನೇ ಚಿತ್ರ, ೧೯೭೩ರಲ್ಲಿ ತೆರೆಕಂಡ, ಗಂಧದ ಗುಡಿ. ರಾಜ್ ಅರಣ್ಯಾಧಿಕಾರಿಯ ಪಾತ್ರದಲ್ಲಿ ನಟಿಸಿದ ಈ ಚಿತ್ರದಲ್ಲಿ ಕನ್ನಡ ಚಿತ್ರರಂಗದ ಮತ್ತೊಬ್ಬ ಖ್ಯಾತ ನಟರಾದ ವಿಷ್ಣುವರ್ಧನ್ ಅಭಿನಯಿಸಿದ್ದಾರೆ. ೧೯೭೪ರಲ್ಲಿ ತೆರೆಕಂಡ ಭಕ್ತ ಕುಂಬಾರ ಚಿತ್ರದಲ್ಲಿನ ರಾಜ್ ಅಭಿನಯ ಮನೋಜ್ಞ ಮತ್ತು ಅತ್ಯಂತ ಭಾವಪೂರ್ಣ ಎಂದು ವಿಮರ್ಶಕರ ಅಭಿಪ್ರಾಯ.
- ಇದೇ ವರ್ಷ ಬಿಡುಗಡೆ ಯಾದ ಸಂಪತ್ತಿಗೆ ಸವಾಲ್ ಚಿತ್ರದ ಯಾರೇ ಕೂಗಾಡಲಿ, ಊರೇ ಹೋರಾಡಲಿ ಹಾಡಿನ ಮೂಲಕ ರಾಜ್ ಹಿನ್ನೆಲೆ ಗಾಯಕರಾಗಿ ತಮ್ಮ ಮುಂದಿನ ಎಲ್ಲ ಚಿತ್ರಗಳಲ್ಲೂ ಹಾಡಲು ಪ್ರಾರಂಭಿಸಿದರು.
- ೧೯೭೫ರಲ್ಲಿ ಬಿಡುಗಡೆಯಾದ ಮಯೂರ ಚಲನಚಿತ್ರವು ಕನ್ನಡದ ಕದಂಬ ರಾಜಮನೆತನದ ಮಯೂರವರ್ಮನನ್ನಾಧರಿಸಿದೆ. ಈ ಚಿತ್ರದಲ್ಲಿರುವ ನಾನಿರುವುದೆ ನಿಮಗಾಗಿ, ನಾಡಿರುವುದೆ ನಮಗಾಗಿ ಗೀತೆಯು ರಾಜ್ ಗಾಯನದಲ್ಲಿನ ಅತ್ಯಂತ ಜನಪ್ರಿಯ ಗೀತೆಗಳಲ್ಲೊಂದು.
- ೧೯೭೬ರಲ್ಲಿ ಮೈಸೂರು ವಿಶ್ವವಿದ್ಯಾಲವು ರಾಜ್ಕುಮಾರ್ ರವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿತು.
- ೧೯೭೭ರಲ್ಲಿ ತೆರೆಕಂಡ ಸನಾದಿ ಅಪ್ಪಣ್ಣ ಚಿತ್ರದಲ್ಲಿ, ಡಾ. ರಾಜ್ ಶಹನಾಯಿ ವಾದಕರಾಗಿ ಅಭಿನಯಿಸಿದರು. ಈ ಚಿತ್ರಕ್ಕೆ ಅವಶ್ಯಕವಾಗಿದ್ದ ಶಹನಾಯಿ ವಾದನವನ್ನು ನುಡಿಸಿದವರು ಭಾರತದ ಪ್ರಖ್ಯಾತ ಶಹನಾಯಿ ವಾದಕರಾದ ಉಸ್ತಾದ್ ಬಿಸ್ಮಿಲ್ಲಾ ಖಾನ್. ಜಿ.ಕೆ.ವೆಂಕಟೇಶ್ ಸಂಗೀತದಲ್ಲಿ ಎಸ್.ಜಾನಕಿಯವರು ಹಾಡಿರುವ ಕರೆದರೂ ಕೇಳದೆ ಎಂಬ ಹಾಡಿನಲ್ಲಿ ಕೇಳಿಸುವ ಸಂಗೀತ ಸ್ವತಃ ಬಿಸ್ಮಿಲ್ಲಾ ಖಾನರೇ ನುಡಿಸಿದ್ದರ.
- ೧೯೮೦ರ ದಶಕದಲ್ಲಿ ಸದಭಿರುಚಿಯ ಸಾಮಾಜಿಕ ಚಿತ್ರಗಳಾದ ಹಾಲುಜೇನು, ಚಲಿಸುವ ಮೋಡಗಳು, ಹೊಸ ಬೆಳಕು, ಶ್ರಾವಣ ಬಂತು, ಅನುರಾಗ ಅರಳಿತು, ಶ್ರುತಿ ಸೇರಿದಾಗ ಮುಂತಾದ ಯಶಸ್ವಿ ಚಿತ್ರಗಳು ತೆರೆ ಕಂಡವು. ಇದೇ ಅವಧಿಯಲ್ಲಿ ಡಾ. ರಾಜ್ ರವರು ಅನಂತ್ ನಾಗ್ ರವರೊಂದಿಗೆ ಕಾಮನಬಿಲ್ಲು ಚಿತ್ರದಲ್ಲಿಯೂ, ಶಂಕರ್ ನಾಗ್ ಫವರೊಂದಿಗೆ ಅಪೂರ್ವ ಸಂಗಮ ಚಿತ್ರದಲ್ಲಿಯೂ ಅಭಿನಯಿಸಿದರು.
- ಶಂಕರ್ ನಾಗ್ ನಿರ್ದೇಶನದ ಕೆಲವೇ ಚಿತ್ರಗಳಲ್ಲಿ ಒಂದಾದ ಒಂದು ಮುತ್ತಿನ ಕಥೆ ಚಿತ್ರದಲ್ಲಿ ಡಾ. ರಾಜ್ ನಟಿಸಿದ್ದಾರೆ. ತಮ್ಮ ಯೋಗಾಸನಗಳಿಗೆ ಹೆಸರಾಗಿದ್ದ ಡಾ. ರಾಜ್ ರವರ ವಿವಿಧ ಯೋಗಾಸನಗಳ ಭಂಗಿಗಳು ಕಾಮನಬಿಲ್ಲು ಚಿತ್ರದ ಮೂಲಕ ಬೆಳ್ಳಿತೆರೆಯ ಮೇಲೂ ಮೂಡಿಬಂದಿದೆ.
- ೧೯೮೩ರಲ್ಲಿ ಬಂದಂತಹ ಕವಿರತ್ನ ಕಾಳಿದಾಸ, ಡಾ. ರಾಜ್ ರವರ ಕಲೆಯ ನೈಪುಣ್ಯಕ್ಕೆ ಓರೆ ಹಚ್ಚಿದ ಚಿತ್ರ. ಈ ಚಿತ್ರದಲ್ಲಿ ಅವಿದ್ಯಾವಂತ ಕುರುಬನಾಗಿಯೂ, ಮಹಾಕವಿಯಾದ ಕಾಳಿದಾಸನಾಗಿಯೂ, ದುಷ್ಯಂತ ಮಹಾರಾಜನಾಗಿಯೂ ವಿವಿಧ ಪಾತ್ರಗಳಿಗೆ ರಾಜ್ ಜೀವ ತುಂಬಿದ್ದಾರೆ. ಈ ಚಿತ್ರವು ಕನ್ನಡ ಚಿತ್ರರಂಗದ ಅತ್ಯಂತ ಯಶಸ್ವಿ ಚಿತ್ರಗಳಲ್ಲೊಂದಾಗಿಸುವಲ್ಲಿ ಡಾ. ರಾಜ್ ಅಮೋಘ ಅಭಿನಯದ ಕೊಡುಗೆ ಮುಖ್ಯವಾದುದೆಂದು ವಿಮರ್ಶಕರ ಅಭಿಪ್ರಾಯ.
- ಡಾ. ರಾಜ್ ರವರ ಇನ್ನೂರನೇ ಚಿತ್ರವು ೧೯೮೮ರಲ್ಲಿ ತೆರೆಕಂಡ ದೇವತಾ ಮನುಷ್ಯ. ಈ ಚಿತ್ರದಲ್ಲಿ ಕನ್ನಡ ಚಿತ್ರರಂಗದ ಹೆಸರಾಂತ ನಟಿಯರೊಲ್ಲೊಬ್ಬರಾದ ಸುಧಾರಾಣಿ ಯವರು ಡಾ. ರಾಜ್ ರವರ ಪುತ್ರಿಯಾಗಿ ನಟಿಸಿದ್ದಾರೆ. ಕನ್ನಡದ ಮತ್ತೊಬ್ಬ ಜನಪ್ರಿಯ ನಾಯಕ ನಟರಾದ ಅಂಬರೀಶ್ ರವರ ಸಹೋದರನಾಗಿ ಒಡಹುಟ್ಟಿದವರು ಚಿತ್ರದಲ್ಲಿ ಅಭಿನಯಿಸಿದ ಡಾ. ರಾಜ್, ಸಾಮಾಜಿಕ ಕಳಕಳಿಯ ಚಿತ್ರಗಳತ್ತ ಒಲವು ತೋರಿದ್ದರು.
- ಜೀವನ ಚೈತ್ರ ಚಿತ್ರದ ಮೂಲಕ ಸಾರಾಯಿ ಪಿಡುಗಿನ ವಿರುದ್ಧ, ಆಕಸ್ಮಿಕ ಚಿತ್ರದ ಮೂಲಕ ಹೆಣ್ಣಿನ ಶೋಷಣೆಯ ವಿರುದ್ಧ, ಶಬ್ದವೇಧಿ ಚಿತ್ರದ ಮೂಲಕ ಮಾದಕ ವ್ಯಸನಗಳ ವಿರುದ್ಧ ಹೋರಾಡುವ ಪಾತ್ರದಲ್ಲಿ ಡಾ. ರಾಜ್ ಅಭಿನಯಿಸಿದರು. ಡಾ. ರಾಜ್ಕುಮಾರ್ ನಾಯಕನಾಗಿ ನಟಿಸಿದ ಕೊನೆಯ ಚಿತ್ರ ಇಸವಿ ೨೦೦೦ರಲ್ಲಿ ತೆರೆಕಂಡ ಶಬ್ದವೇದಿ.
- ಭಕ್ತ ಅಂಬರೀಶ ಎಂಬ ಚಿತ್ರದಲ್ಲಿ ನಟಿಸಬೇಕೆಂಬ ಹಂಬಲವನ್ನು ರಾಜ್ ಹಲವಾರು ಬಾರಿ ವ್ಯಕ್ತಪಡಿಸಿದ್ದರಾದರೂ ಅನಾರೋಗ್ಯದ ಕಾರಣ ಅದು ಸಾಧ್ಯವಾಗಲಿಲ್ಲ.
- ಬೆಳ್ಳಿತೆರೆಯ ಮೇಲೆ ಡಾ. ರಾಜ್ ರವರು ಕಡೆಯದಾಗಿ ಕಾಣಿಸಿಕೊಂಡ ಚಿತ್ರ ತಮ್ಮ ಪುತ್ರ ಶಿವರಾಜ್ಕುಮಾರ್ ನಾಯಕತ್ವದಲ್ಲಿನ ಜೋಗಿ. ಚಿತ್ರದ ಆರಂಭದ ದೃಶ್ಯದಲ್ಲಿ ನಾಯಕನ ಜೋಳಿಗೆಗೆ ಅಕ್ಕಿಯನ್ನು ಅರ್ಪಿಸಿ, ಆಶೀರ್ವದಿಸುತ್ತಾರೆ.
- ಸುಮಾರು ೨೦೬ ಚಿತ್ರಗಳಲ್ಲಿ ನಾಯಕನಟರಾಗಿ ನಟಿಸಿರುವ ರಾಜ್ ಕುಮಾರ್ ಬೆರಳೆಣಿಕೆಯ ರಿಮೇಕ್ ಚಿತ್ರಗಳಲ್ಲಿ ನಟಿಸಿದ್ದಾರೆ. ಅವೆಂದರೆ "ಅಣ್ಣ ತಂಗಿ","ಮುರಿಯದ ಮನೆ","ವಾತ್ಸಲ್ಯ", "ಮನಸಾಕ್ಷಿ", "ಬಾಳ ಬಂಧನ","ನನ್ನ ತಮ್ಮ", "ಭಾಗ್ಯವಂತರು", "ಅಪೂರ್ವ ಸಂಗಮ" ಮುಂತಾದವುಗಳು. ಅಲ್ಲಿಯೂ ಅವರು ಮೂಲ ನಟರನ್ನು ಅನುಕರಿಸದೆ ತಮ್ಮದೇ ಶೈಲಿಯಲ್ಲಿ ಅಭಿನಯಿಸಿದ್ದಾರೆ. "ಬೇಡರ ಕಣ್ಣಪ್ಪ" ತೆಲುಗಿನಲ್ಲಿ ‘ಶ್ರೀ ಕಾಳಹಸ್ತಿ ಮಹಾತ್ಮಂ’ ಎಂಬ ಹೆಸರಲ್ಲಿ ತಯಾರಾಯಿತು. ಅದರಲ್ಲೂ ಕೂಡ ಡಾ. ರಾಜ್ ಕುಮಾರ್ ಹೀರೊ ಆಗಿ ನಟಿಸಿದರು. ಇದು ಬೇರೆ ಭಾಷೆಯಲ್ಲಿ ರಾಜ್ ಕುಮಾರ್ ನಟಿಸಿದ ಏಕೈಕ ಚಿತ್ರ.
- ಡಾ. ರಾಜ್ ಕುಮಾರ್ ರವರು ಅಂದಿನ ಬಹುತೇಕ ಎಲ್ಲ ಜನಪ್ರಿಯ ನಾಯಕಿಯರೊಂದಿಗೆ ನಟಿಸಿದ್ದಾರೆ. ಎಂ.ವಿ.ರಾಜಮ್ಮ, ಪಂಡರೀಬಾಯಿ, ಪ್ರತಿಮಾದೇವಿ, ಹರಿಣಿ, ಸಾಹುಕಾರ್ ಜಾನಕಿ, ಕೃಷ್ಣಕುಮಾರಿ, ರಾಜಸುಲೋಚನ, ಬಿ.ಸರೋಜದೇವಿ, ಸಂಧ್ಯಾ,ಆದವಾನಿ ಲಕ್ಷ್ಮಿ ದೇವಿ, ಮೈನಾವತಿ, ಲೀಲಾವತಿ, ಜಯಂತಿ, ಭಾರತಿ, ಕಲ್ಪನಾ, ವಂದನಾ, ಚಂದ್ರಕಲಾ, ಉದಯಚಂದ್ರಿಕಾ, ಬಿ.ವಿ.ರಾಧ, ಶೈಲಶ್ರೀ, ರಾಜಶ್ರೀ, ಆರತಿ, ಮಂಜುಳಾ, ಲಕ್ಷ್ಮಿ, ರೇಖಾ, ಜಯಮಾಲಾ, ಜಯಪ್ರದಾ, ಗಾಯತ್ರಿ, ಸರಿತಾ, ಜಯಚಿತ್ರಾ, ಕಾಂಚನಾ, ವಾಣಿಶ್ರೀ, ಜಿ.ವಿ.ಲತಾ, ಮಾಧವಿ, ಗೀತಾ, ಅಂಬಿಕಾ, ರೂಪಾದೇವಿ, ಊರ್ವಶಿ ಮುಂತಾದವರೊಂದಿಗೆ ನಟಿಸಿದ್ದಾರೆ. ರಾಜ್-ಭಾರತಿ, ರಾಜ್-ಲೀಲಾವತಿ, ರಾಜ್-ಜಯಂತಿ, ರಾಜ್-ಕಲ್ಪನಾ ಜೋಡಿ ಆ ಕಾಲದಲ್ಲಿ ಅತ್ಯಂತ ಜನಪ್ರಿಯ ಜೋಡಿಯಾಗಿತ್ತು.
ಅವರ ನಟನೆಯ ಐತಿಹಾಸಿಕ ಚಿತ್ರಗಳು
[ಬದಲಾಯಿಸಿ]- ಮಯೂರ
- ಶ್ರೀ ಕೃಷ್ಣದೇವರಾಯ
- ರಣಧೀರ ಕಂಠೀರವ
- ಇಮ್ಮಡಿ ಪುಲಿಕೇಶಿ
- ಕಿತ್ತೂರು ಚೆನ್ನಮ್ಮ
- ಕವಿರತ್ನ ಕಾಳಿದಾಸ
- ಬಭ್ರುವಾಹನ
- ವೀರ ಕೇಸರಿ
ಭಕ್ತಿ ಪ್ರಧಾನ ಚಿತ್ರಗಳು
[ಬದಲಾಯಿಸಿ]ಭಕ್ತನ ಪಾತ್ರದಲ್ಲಿ
[ಬದಲಾಯಿಸಿ]- ಭಕ್ತ ಕನಕದಾಸ
- ನವಕೋಟಿ ನಾರಾಯಣ (ಭಕ್ತ ಪುರಂದರದಾಸ)
- ಸರ್ವಜ್ಞಮೂರ್ತಿ
- ಮಹಾತ್ಮ ಕಬೀರ್
- ಸಂತ ತುಕಾರಾಮ
- ವಾಲ್ಮೀಕಿ
- ಭೂಕೈಲಾಸ
- ಹರಿಭಕ್ತ
- ಭಕ್ತ ವಿಜಯ
- ಭಕ್ತ ಚೇತ
- ಭಕ್ತ ಕುಂಬಾರ
- ಮಂತ್ರಾಲಯ ಮಹಾತ್ಮೆ
ದೇವರ ಪಾತ್ರದಲ್ಲಿ
[ಬದಲಾಯಿಸಿ]- ಶ್ರೀ ಶ್ರೀನಿವಾಸ ಕಲ್ಯಾಣ
- ಶ್ರೀ ರಾಮಾಂಜನೇಯ ಯುದ್ಧ
- ಶ್ರೀಕೃಷ್ಣ ರುಕ್ಮಿಣಿ ಸತ್ಯಭಾಮ
- ಶಿವ ಮೆಚ್ಚಿದ ಕಣ್ಣಪ್ಪ
- ಮೂರೂವರೆ ವಜ್ರಗಳು
- ಕೃಷ್ಣ ಗಾರುಡಿ
ಪತ್ತೇದಾರ/ಗೂಢಚಾರಿ ಪಾತ್ರದಲ್ಲಿ
[ಬದಲಾಯಿಸಿ]- ಜೇಡರ ಬಲೆ
- ಆಪರೇಷನ್ ಜಾಕ್ಪಾಟ್ನಲ್ಲಿ ಸಿ.ಐ.ಡಿ. ೯೯೯
- ಗೋವಾದಲ್ಲಿ ಸಿ.ಐ.ಡಿ. ೯೯೯
- ಸಿ.ಐ.ಡಿ. ರಾಜಣ್ಣ
- ಬೆಂಗಳೂರು ಮೈಲ್
- ಆಪರೇಷನ್ ಡೈಮಂಡ್ ರಾಕೆಟ್
- ಭಲೇ ಹುಚ್ಚ
- ಚೂರಿಚಿಕ್ಕಣ್ಣ
- ಜೇಡರ ಬಲೆ,
- ಆಪರೇಷನ್ ಜಾಕ್ಪಾಟ್ನಲ್ಲಿ ಸಿ.ಐ.ಡಿ. ೯೯೯,
- ಗೋವಾದಲ್ಲಿ ಸಿ.ಐ.ಡಿ. ೯೯೯ ಮತ್ತು
- ಆಪರೇಷನ್ ಡೈಮಂಡ್ ರಾಕೆಟ್ ಚಿತ್ರಗಳು ಜೇಮ್ಸ್ಬಾಂಡ್ ಮಾದರಿಯಲ್ಲಿ ಬಂದಂತಹ ಸರಣಿ ಚಲನಚಿತ್ರಗಳು. ಈ ನಾಲ್ಕೂ ಚಿತ್ರಗಳಲ್ಲಿ 'ಪ್ರಕಾಶ್' ಎಂಬ ಹೆಸರಿನ ಸಿ.ಐ.ಡಿ ೯೯೯ ಪಾತ್ರದಲ್ಲಿ ಡಾ. ರಾಜ್ ಅಭಿನಯಿಸಿದ್ದಾರೆ.
ಖಳ/ಪ್ರತಿನಾಯಕನ ಪಾತ್ರದಲ್ಲಿ
[ಬದಲಾಯಿಸಿ]- ಮಹಿಷಾಸುರ ಮರ್ದಿನಿ - ಮಹಿಷಾಸುರ
- ಕರುಣೆಯೇ ಕುಟುಂಬದ ಕಣ್ಣು
- ಸಾಕು ಮಗಳು
- ಸತಿ ಶಕ್ತಿ - ರಕ್ತಾಕ್ಷ
- ದಾರಿ ತಪ್ಪಿದ ಮಗ - ಪ್ರಕಾಶ್
- ದಶಾವತಾರ
- ಭಕ್ತ ಪ್ರಹ್ಲಾದ - ಹಿರಣ್ಯಕಶ್ಯಪು
- ತುಂಬಿದ ಕೊಡ
- ಶ್ರೀ ಕೃಷ್ಣಗಾರುಡಿ - ಅರ್ಜುನ
- ಶ್ರೀ ಕನ್ನಿಕಾಪರಮೇಶ್ವರಿ ಕಥೆ - ರಾಜಾ ವಿಷ್ಣು ವರ್ಧನ
ಡಾ. ರಾಜ್ ಅತಿಥಿನಟನಾಗಿ ಕಾಣಿಸಿಕೊಂಡ ಚಿತ್ರಗಳು
[ಬದಲಾಯಿಸಿ]- ಭಕ್ತ ಪ್ರಹ್ಲಾದ (೧೯೪೨)
- ಶ್ರೀ ಶ್ರೀನಿವಾಸ ಕಲ್ಯಾಣ (೧೯೫೨)
- ನಾಡಿನ ಭಾಗ್ಯ
- ಭಾಗ್ಯವಂತ
- ಶಿವ ಮೆಚ್ಚಿದ ಕಣ್ಣಪ್ಪ
- ಗಂಧದಗುಡಿ ಭಾಗ ೨
- ಜೋಗಿ
ರಾಜ್ ನಾಯಕನಾಗಿ ಅಭಿನಯಿಸಿದ ಚಲನಚಿತ್ರಗಳ ಸಂಪೂರ್ಣ ಪಟ್ಟಿ (ಫಿಲ್ಮೋಗ್ರಾಫಿ)
[ಬದಲಾಯಿಸಿ]ಅತಿಥಿ ನಟನಾಗಿ ಅಭಿನಯಿಸಿದ ಚಿತ್ರಗಳು
- ಶ್ರೀನಿವಾಸ ಕಲ್ಯಾಣ ೧೯೫೧
- ಗಂಧದ ಗುಡಿ ಭಾಗ ೨
- ಜೋಗಿ
ಗಾಯಕರಾಗಿ ಡಾ. ರಾಜ್
[ಬದಲಾಯಿಸಿ]- ಕೇವಲ ನಟನೆಯಲ್ಲದೆ, ಅತ್ಯುತ್ತಮ ಗಾಯಕರೂ ಆಗಿದ್ದ ರಾಜ್ ಕನ್ನಡ ಗಾನಲೋಕಕ್ಕೂ ತಮ್ಮ ಅಪಾರ ಸೇವೆ ಸಲ್ಲಿಸಿದ್ದಾರೆ. ೧೯೭೪ರಲ್ಲಿ ಬಿಡುಗಡೆಯಾದ ಸಂಪತ್ತಿಗೆ ಸವಾಲ್ ಚಿತ್ರದ ಯಾರೇ ಕೂಗಾಡಲಿ,ಊರೇ ಹೋರಾಡಲಿ (ಎಮ್ಮೆ ಹಾಡೆಂದೇ ಪ್ರಸಿದ್ಧಿ) ಎಂಬ ಹಾಡಿನಿಂದ ಅವರು ಪೂರ್ಣ ಪ್ರಮಾಣದ ಗಾಯಕರಾಗಿ ಹೊರ ಹೊಮ್ಮಿದರು.
- ಇದಕ್ಕೂ ಮುಂಚೆ ೧೯೫೬ರಲ್ಲೇ ಓಹಿಲೇಶ್ವರ (ಚಲನಚಿತ್ರ) ಚಿತ್ರದಲ್ಲಿ "ಶರಣು ಶಂಭೋ" ಎಂಬು ಗೀತೆಯೊಂದನ್ನು ಹಾಗೂ ಮಹಿಷಾಸುರ ಮರ್ಧಿನಿ ಚಿತ್ರದಲ್ಲಿ ಎಸ್.ಜಾನಕಿಯವರೊಡನೆ "ತುಂಬಿತು ಮನವ ತಂದಿತು ಸುಖವ" ಎಂಬ ಯುಗಳ ಗೀತೆಯನ್ನು ಹಾಡಿದ್ದರು. ಈ ಮೂರು ಚಿತ್ರಗಳಿಗೆ ಜಿ.ಕೆ.ವೆಂಕಟೇಶ್ ಸಂಗೀತ ರಚನೆ ಮಾಡಿದ್ದಾರೆ.
- ಜಿ.ಕೆ.ವೆಂಕಟೇಶ್ ಹಾಗೂ ಉಪೇಂದ್ರಕುಮಾರ್ ಸಂಗೀತದಲ್ಲಿ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ.
೧೯೬೨ರಲ್ಲಿ, ದೇವಸುಂದರಿ ಚಿತ್ರದಲ್ಲಿ ಹಾಸ್ಯರತ್ನ ನರಸಿಂಹರಾಜು ರವರ ಪಾತ್ರಕ್ಕೆ ಯುಗಳ ಗೀತೆಯೊಂದನ್ನೂ ಹಾಡಿದ್ದಾರೆ. ಡಾ. ರಾಜ್ ರವರು ಬೇರೊಬ್ಬರ ಅಭಿನಯಕ್ಕೆ ಹಿನ್ನೆಲೆ ಗಾಯನ ಮಾಡಿದ ಮೊದಲ ಚಿತ್ರಗೀತೆಯಿದು.
೧೯೬೪ರಲ್ಲಿ, ನವಕೋಟಿನಾರಾಯಣ (ಭಕ್ತ ಪುರಂದರದಾಸ) ಚಲನಚಿತ್ರದಲ್ಲಿ ಕೆಲವು ಕೀರ್ತನೆ ಗಳನ್ನು ಹಾಡಿದ್ದಾರೆ.
- ಜೀವನ ಚೈತ್ರ ಚಿತ್ರದಲ್ಲಿನ ನಾದಮಯ ಈ ಲೋಕವೆಲ್ಲಾ ಹಾಡಿನ ಗಾಯನಕ್ಕೆ ರಾಷ್ಟ್ರ ಪ್ರಶಸ್ತಿಯನ್ನು ಪಡೆದರು.
೨೦೦೩ರಲ್ಲಿ ಬಿಡುಗಡೆಯಾದ ಅಭಿ ಚಿತ್ರದ "ವಿಧಿ ಬರಹ ಎಂಥ ಘೋರ" ಹಾಗು ಅದೇ ವರ್ಷದ ಚಿಗುರಿದ ಕನಸು ಚಿತ್ರದ "ಬಂಧುವೇ ಓ ಬಂಧುವೇ" ಇವರು ಹಾಡಿದ ಇತ್ತೀಚಿನ ಚಿತ್ರಗೀತೆಗಳು.
- ಚಿತ್ರಗೀತೆಗಳಷ್ಟೇ ಅಲ್ಲದೆ ಹಲವಾರು ಭಕ್ತಿಗೀತೆಗಳನ್ನೂ ರಾಜ್ ಹಾಡಿದ್ದಾರೆ.
- ಕನ್ನಡವೇ ಸತ್ಯ, ಅನುರಾಗ, ಮಂಕುತಿಮ್ಮನ ಕಗ್ಗ - ರಾಜ್ ಕಂಠದಲ್ಲಿ ಮೂಡಿ ಬಂದ ಭಾವಗೀತೆ ಸಂಕಲನಗಳು.
- ರಾಜ್ ಕುಮಾರ್ ರವರು ತಮ್ಮ ಹೆಚ್ಚಿನ ಹಾಡುಗಳನ್ನು ಎಸ್. ಜಾನಕಿ ಮತ್ತು ವಾಣಿ ಜಯರಾಂ ರವರೊಂದಿಗೆ ಹಾಡಿದ್ದಾರೆ. ಅಲ್ಲದೆ, ಪಿ. ಸುಶೀಲ, ಬೆಂಗಳೂರು ಲತಾ, ರತ್ನಮಾಲ ಪ್ರಕಾಶ್, ಮಂಜುಳಾ ಗುರುರಾಜ್, ಬಿ. ಆರ್. ಛಾಯಾ, ಕಸ್ತೂರಿ ಶಂಕರ್, ಚಿತ್ರಾ, ಸುಲೋಚನಾ ರವರೊಂದಿಗೂ ಯುಗಳಗೀತೆಗಳನ್ನು ಹಾಡಿದ್ದಾರೆ.
- ಹುಟ್ಟಿದರೇ ಕನ್ನಡನಾಡ್ನಲ್ ಹುಟ್ಟಬೇಕು, ಮೆಟ್ಟಿದರೇ, ಕನ್ನಡ ಮಣ್ಣಲ್ಲಿ ಮೆಟ್ಟಬೇಕು ಗೀತೆಯನ್ನು ಸಾಮಾನ್ಯವಾಗಿ ಹೋದೆಡೆಯಲ್ಲೆಲ್ಲಾ ಹಾಡುತ್ತಿದ್ದರು. ತಮ್ಮ 'ದಾದಾ ಸಾಹೇಬ್ ಫಾಲ್ಕೆ ಪುರಸ್ಕಾರ', ವನ್ನು ದೆಹಲಿಯಲ್ಲಿ ಪಡೆದ ಬಳಿಕ, ಮುಂಬಯಿ ಗೆ ಭೇಟಿಕೊಟ್ಟಾಗ, 'ಕರ್ನಾಟಕ ಸಂಘ' ದ ರಂಗಮಂಚದ ಮೇಲೆ, ಮೇಲಿನ ಗೀತೆಯನ್ನು ಅವರ ಮಕ್ಕಳ ಸಮೇತ ಕುಣಿದು-ಕುಪ್ಪಳಿಸಿ ಹಾಡಿದ ಸಡಗರ ಇನ್ನೂ ಮುಂಬಯಿ ನಗರದ, ಕನ್ನಡ ರಸಿಕರ ಮನದಲ್ಲಿ ಹಸಿರಾಗಿ ಉಳಿದಿದೆ.
- ರಾಷ್ಟ್ರಕವಿ ಕುವೆಂಪು ರಚಿಸಿದ 'ಕನ್ನಡವೇ ಸತ್ಯ' ಹಾಡನ್ನು ಡಾ. ರಾಜಕುಮಾರ್ ಭಾವಗೀತೆಯ ಮೇರು ಕಲಾವಿದ ಡಾ. ಸಿ.ಅಶ್ವತ್ಥ್ ರವರ ಸಂಗೀತ ನಿರ್ದೇಶನದಲ್ಲಿ ಹಾಡಿದ್ದಾರೆ. ಇದು ಮೈಸೂರು ಅನಂತಸ್ವಾಮಿಯವರ ಆವೃತ್ತಿಗಿಂತಲೂ ಭಾರೀ ಜನಪ್ರಿಯತೆ ಗಳಿಸಿತು.
ಕನ್ನಡಪರ ಚಳುವಳಿಗಳಲ್ಲಿ ಡಾ. ರಾಜ್
[ಬದಲಾಯಿಸಿ]
- ಗೋಕಾಕ್ ವರದಿಯು ಕನ್ನಡವನ್ನು ಪ್ರಾಥಮಿಕ ಶಿಕ್ಷಣದಲ್ಲಿ ಕಡ್ಡಾಯವಾಗಿ ಅಳವಡಿಸಿಕೊಳ್ಳುವುದು ಹಾಗು ಇನ್ನಿತರ ಮೂಲಭೂತ ಸೌಲಭ್ಯಗಳನ್ನು ಕನ್ನಡ ಭಾಷೆಗೆ ಕೊಡುವುದರ ಬಗ್ಗೆ ಸಿದ್ಧವಾಗಿತ್ತು. ಆದರೆ, ಈ ವರದಿಯನ್ನು ಜಾರಿಗೆ ತರಲು ಸರ್ಕಾರ ಹಿಂದೇಟು ಹಾಕುತ್ತಿತ್ತು. ೧೯೮೧ರಲ್ಲಿ, ಪಾಟೀಲ ಪುಟ್ಟಪ್ಪ, ಚಂದ್ರಶೇಖರ ಪಾಟೀಲ್ ಮುಂತಾದ ಸಾಹಿತಿಗಳು, ಕನ್ನಡ ವಿದ್ಯಾರ್ಥಿಗಳು, ಹಲವು ಸಂಘಸಂಸ್ಥೆಗಳು ಗೋಕಾಕ್ ವರದಿಯನ್ನು ಜಾರಿಗೊಳಿಸುವಂತೆ ಚಳುವಳಿಯನ್ನು ಪ್ರಾರಂಭ ಮಾಡಿದರು.
- ಇದೇ ಚಳುವಳಿಯು ಗೋಕಾಕ್ ಚಳುವಳಿ ಎಂದೇ ಹೆಸರಾಯಿತು.
- ಚಳುವಳಿಯು ಪ್ರಾರಂಭಗೊಂಡು ಹಲವಾರು ದಿನಗಳು ಕಳೆದರೂ, ಜನಸಾಮಾನ್ಯರಿಂದ ಉತ್ಸಾಹದ ಪ್ರತಿಕ್ರಿಯೆ ಕಂಡುಬರಲಿಲ್ಲ. ಈ ಸಮಯದಲ್ಲಿ, ಡಾ. ರಾಜ್ ರವರನ್ನು ಚಳುವಳಿಗೆ ಆಹ್ವಾನಿಸಿ, ಚಳುವಳಿಯ ಬಲವರ್ಧನೆ ಮಾಡಬೇಕೆಂದು ಕೋರಲಾಯಿತು. ಡಾ. ರಾಜ್ ನೇತೃತ್ವದಲ್ಲಿ ಕನ್ನಡ ಚಿತ್ರರಂಗ, ಗೋಕಾಕ್ ಚಳುವಳಿಗೆ ಸಂಪೂರ್ಣ ಸಹಕಾರ ನೀಡಲು ಪ್ರಕಟಿಸಿ, ರಾಜ್ಯದಾದ್ಯಂತ ಪ್ರವಾಸ ಕೈಗೊಂಡಿತು.
- ಹಲವಾರು ಸಭೆಗಳು, ಭಾಷಣಗಳು ಕರ್ನಾಟಕದ ಪ್ರಮುಖ ನಗರಗಳಲ್ಲಿ ಜರುಗಿದವು. ಕರ್ನಾಟಕದ ಜನತೆ ಚಳುವಳಿಗೆ ಹಿಂದೆಂದಿಗಿಂತಲೂ ಹೆಚ್ಚಿನ ಉತ್ಸಾಹದಿಂದ ಭಾಗವಹಿಸಿ ಪ್ರೋತ್ಸಾಹಿಸಿದರು. ಕನ್ನಡದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು, ಅಭಿಮಾನ ಬೆಳೆಸಲು, ಕನ್ನಡ ಭಾಷೆಗೆ ಸಿಗಬೇಕಾದ ಹಕ್ಕುಗಳು, ಸೌಲಭ್ಯಗಳನ್ನು ಆಗಿನ ಕರ್ನಾಟಕ ಸರ್ಕಾರಕ್ಕೆ ಮನದಟ್ಟು ಮಾಡಿಕೊಡಲು, ಡಾ. ರಾಜ್ ರವರ ಭಾಷಣಗಳು ಹಾಗು ಚಳುವಳಿಯ ನೇತೃತ್ವ ಸಹಾಯಕಾರಿಯಾದವು. ಗುಂಡೂರಾವ್ ನೇತೃತ್ವದ ಆಗಿನ ಕರ್ನಾಟಕ ಸರ್ಕಾರವು ಚಳುವಳಿಯ ತೀವ್ರತೆಗೆ ಸ್ಪಂದಿಸಿ, ಗೋಕಾಕ್ ವರದಿಯನ್ನು ಜಾರಿಗೊಳಿಸಿತು.
ಪ್ರಶಸ್ತಿ/ ಪುರಸ್ಕಾರಗಳು/ಬಿರುದುಗಳು
[ಬದಲಾಯಿಸಿ]
ಪ್ರಶಸ್ತಿಗಳು
[ಬದಲಾಯಿಸಿ]- ಪದ್ಮಭೂಷಣ (ಭಾರತ ಸರ್ಕಾರದಿಂದ)
- ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ (೧೯೯೫ರಲ್ಲಿ ಭಾರತ ಸರ್ಕಾರದಿಂದ)
- ಕರ್ನಾಟಕ ರತ್ನ (ಕರ್ನಾಟಕ ಸರ್ಕಾರ)
- ರಾಷ್ಟ್ರಪ್ರಶಸ್ತಿ (ಜೀವನ ಚೈತ್ರ ಚಿತ್ರದಲ್ಲಿನ 'ನಾದಮಯ ಈ ಲೋಕವೆಲ್ಲಾ' ಹಾಡಿನ ಗಾಯನಕ್ಕೆ)
- ಅತ್ಯುತ್ತಮ ನಟ - ಫಿಲ್ಮ್ಫೇರ್ ಪ್ರಶಸ್ತಿ (ಹತ್ತು ಬಾರಿ)
- ಅತ್ಯುತ್ತಮ ನಟ - ರಾಜ್ಯಪ್ರಶಸ್ತಿ (ಒಂಭತ್ತು ಬಾರಿ)
- ಕೆಂಟಕಿ ಕರ್ನಲ್ (ಅಮೆರಿಕದ ಕೆಂಟಕಿ ರಾಜ್ಯದ ಗವರ್ನರ್ ೧೯೮೫ರಲ್ಲಿ ಬೆಂಗಳೂರಲ್ಲಿ ನೀಡಿದರು)
- ನಾಡೋಜ ಪ್ರಶಸ್ತಿ (ಕನ್ನಡ ವಿಶ್ವವಿದ್ಯಾಲಯ, ಹಂಪಿ)
- ಗುಬ್ಬಿ ವೀರಣ್ಣ ಪ್ರಶಸ್ತಿ (ಕರ್ನಾಟಕ ಸರ್ಕಾರ)
- ಕಲಾ ಕೌಸ್ತುಭ (ವೃತ್ತಿ ರಂಗಭೂಮಿಗೆ ಸಲ್ಲಿಸಿದ ಸೇವೆಗೆ, ಕರ್ನಾಟಕ ಸರ್ಕಾರದಿಂದ)
ಪದವಿಗಳು
[ಬದಲಾಯಿಸಿ]- ಗೌರವ ಡಾಕ್ಟರೇಟ್(ಮೈಸೂರು ವಿಶ್ವವಿದ್ಯಾಲಯ)
ಬಿರುದುಗಳು
[ಬದಲಾಯಿಸಿ]- ಅಭಿನಯ ಕಲಾಶ್ರೀ
- ಅಭಿನಯ ಕೇಸರಿ
- ಅಭಿನಯ ಚಕ್ರೇಶ್ವರ
- ಅಭಿನಯ ನೃಪತುಂಗ
- ಅಭಿನಯ ಬ್ರಹ್ಮ
- ಅಭಿನಯ ಭಗೀರಥ
- ಅಭಿನಯ ಭಾರ್ಗವ
- ಅಭಿನಯ ರತ್ನ
- ಅಭಿನಯ ವಾಲ್ಮೀಕಿ
- ಅಭಿನಯ ಶಿರೋಮಣಿ
- ಅಭಿನಯ ಸಂಜಾತ
- ಅಭಿನಯ ಸವ್ಯಸಾಚಿ
- ಅಭಿನಯ ಸಿಂಹ
- ಅಭಿನಯ ಸೃಷ್ಟಿಕರ್ತ
- ಅಮರ ಜೀವಿ
- ಅಮರ ಜ್ಯೋತಿ
- ಕನ್ನಡ ಕಂಠೀರವ
- ಕನ್ನಡ ಕಲಾ ಕಿರೀಟ
- ಕನ್ನಡ ಕಲಾ ಕುಸುಮ
- ಕನ್ನಡ ಕಲಾ ತಿಲಕ
- ಕನ್ನಡ ಕುಲ ರತ್ನ
- ಕನ್ನಡ ಕೇಸರಿ
- ಕನ್ನಡ ಗಾನ ಕೌಸ್ತುಭ
- ಕನ್ನಡ ಜನಕೋಟಿಯ ಪ್ರೀತಿಯ ಪುತ್ಥಳಿ
- ಕನ್ನಡ ತಾಯಿಯ ಹೆಮ್ಮೆಯ ಮಗ
- ಕನ್ನಡದ ರಕ್ಷಕ
- ಕನ್ನಡದ ಕಣ್ಮಣಿ
- ಕನ್ನಡದ ಕಂದ
- ಕನ್ನಡದ ಕಲಿ
- ಕನ್ನಡದ ಕಳಶ
- ಕನ್ನಡದ ಕುಲ ದೇವ
- ಕನ್ನಡದ ಚೇತನ
- ಕನ್ನಡದ ಜೀವ
- ಕನ್ನಡದ ಧ್ರುವತಾರೆ
- ಕನ್ನಡದ ನಂದಾ ದೀಪ
- ಕನ್ನಡದ ಬಂಧು
- ಕನ್ನಡದ ಭೂ ಪಟ
- ಕನ್ನಡದ ಮಾಣಿಕ್ಯ
- ಕನ್ನಡದ ಮೇಷ್ಟ್ರು
- ಕನ್ನಡದ ವಿಧಾತ
- ಕನ್ನಡಿಗರ ಆರಾಧ್ಯ ದೈವ
- ಕನ್ನಡಿಗರ ಕಣ್ಮಣಿ
- ಕನ್ನಡಿಗರ ಹೃದಯ ಸಿಂಹಾಸಾನಾಧೀಶ್ವರ
- ಕರುನಾಡ ಅಧಿಪತಿ
- ಕರುನಾಡ ಕಲಾ ನಿಧಿ
- ಕರುನಾಡ ಹುಲಿ
- ಕರ್ನಾಟಕ ಕೀರ್ತಿವರ್ಮ
- ಕರ್ನಾಟಕ ರತ್ನ
- ಕರ್ನಾಟಕ ಸಾಂಸ್ಕೃತಿಕ ರಾಯಭಾರಿ
- ಕಲಾ ಆರಾಧಕ
- ಕಲಾ ಕಮಲ ರಾಜಹಂಸ
- ಕಲಾ ಕರ್ಮಯೋಗಿ
- ಕಲಾ ಕುಸುಮ
- ಕಲಾ ಕೌಸ್ತುಭ
- ಕಲಾ ಜ್ಯೋತಿ
- ಕಲಾ ತಪಸ್ವಿ
- ಕಲಾ ತೇಜ
- ಕಲಾ ದಾಹಿ
- ಕಲಾ ದೀವಿಗೆ
- ಕಲಾ ಪುಂಗವ
- ಕಲಾ ಪುರುಷೋತ್ತಮ
- ಕಲಾ ಪೋಷಕ
- ಕಲಾ ಭಕ್ತ
- ಕಲಾ ಭೂಷಣ
- ಕಲಾ ಯೋಗಿ
- ಕಲಾ ವಿನೀತ
- ಕಲಾ ಶ್ರೇಷ್ಠ
- ಕಲಾ ಸಿರಿ ರತ್ನ
- ಕಾಯಕ ಯೋಗಿ
- ಕಾಯಕ ರತ್ನ
- ಕೃಷ್ಣಾನುಗ್ರಹಿ
- ಕೆಂಟಕಿ ಕರ್ನಲ್
- ಗಾಜನೂರು ಗಂಡು
- ಗಾನ ಕಲಾಶ್ರೀ
- ಗಾನ ಕೋಗಿಲೆ
- ಗಾನ ಗಂಗೆ
- ಗಾನ ಗಂಧರ್ವ
- ಗಾನ ಗಾರುಡಿಗ
- ಗಾನ ಜ್ಯೋತಿ
- ಗಾನ ತರಂಗ
- ಗಾನ ಯೋಗಿ
- ಗಾನ ರಸಿಕ
- ಗಾನ ಲಹರಿ
- ಗಾನ ವಾರಿಧಿ
- ಗಾನ ವಿಭೂಷಣ
- ಗಾನ ಸಿಂಧು
- ಗಿರಿ ನಟ
- ಗೆಲುವಿನ ಹಮ್ಮೀರ
- ಗೌರವ ಡಾಕ್ಟರಟ್ ಪುರಸ್ಕೃತ
- ಚಿತ್ರರಂಗದ ಧ್ರುವತಾರೆ
- ಜಗ ಮೆಚ್ಚಿದ ಮಗ
- ಜ್ಞಾನದಾಹಿ
- ದಾದ ಸಾಹೇಬ್ ಪಾಲ್ಕೇ ಪುರಸ್ಕ್ರುತ
- ದೇವತಾ ಮನುಷ್ಯ
- ದೇವರ ದೇವ ಕಲಾ ದೇವ
- ನಕ್ಷತ್ರಗಳ ರಾಜ
- ನಗುವಿನ ಸರದಾರ
- ನಟ ಭಯಂಕರ
- ನಟ ರತ್ನಾಕರ
- ನಟ ವೈಭವೇಶ್ವರ
- ನಟ ಶೇಖರ
- ನಟ ಸಾರ್ವಭೌಮ
- ನವರಸ ಮಂಜೂಷ
- ನಾಡೋಜ
- ನೇತ್ರದಾನದ ಸ್ಪೂರ್ತಿ ರತ್ನ
- ಪದ್ಮ ಭೂಷಣ
- ಪದ್ಮ ವಿಭೂಷಣ
- ಪ್ರಾತಃ ಸ್ಮರಣಿಯ
- ಬೆಳ್ಳಿ ತೆರೆಯ ಬಂಗಾರ
- ಭಕ್ತ ಕಲಾ ರತ್ನ
- ಭಾಗ್ಯವಂತ
- ಮಧುರ ಕಂಠಶ್ರೀ
- ಮಹಾ ತಪಸ್ವಿ
- ಮಹಾ ಪುರುಷ
- ಮಹಾ ಮಹಿಮ
- ಮಹಾ ಯೋಗಿ
- ಮೇರು ನಟ
- ಯೋಗ ಕಲಾ ರತ್ನ
- ರತ್ನ ದೀಪ
- ರಸಿಕರ ರಾಜ
- ರಾಜಕೀರ್ತಿ ಮೆರೆದ ಗಂಡುಗಲಿ
- ಲೋಕ ಪೂಜಿತ
- ವರ ನಟ
- ವಿನಯ ಶೀಲ
- ವಿಶ್ವ ಮಾನವ
- ವಿಶ್ವ ಶಾಂತಿ ಪ್ರಿಯ
- ವೀರಾಧಿ ವೀರ
- ಶತಮಾನದ ಯುಗ ಪುರುಷ
- ಶುದ್ಧ ಮನಸ್ಸಿನ ಹಿಮಶಿಖರ
- ಸಂಗೀತ ರತ್ನ
- ಸಮಾಜ ಭೂಷಣ
- ಸರಸ್ವತಿ ಪುತ್ರ
- ಸರಳತೆಯ ಸಂತ
- ಸರಳತೆಯ ಸಾಕಾರಮೂರ್ತಿ
- ಸೋಲಿಲ್ಲದ ಸರದಾರ
ಡಾ. ರಾಜ್ಕುಮಾರ್ ರಸ್ತೆ
[ಬದಲಾಯಿಸಿ]ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ, ಯಶವಂತಪುರ ಮೇಲ್ಸೇತುವೆಯಿಂದ ಪ್ರಸನ್ನ ಚಿತ್ರಮಂದಿರದವರೆಗೆ ರಾಜಾಜಿನಗರದ ಮೂಲಕ ಹಾದುಹೋಗುವ ಮುಖ್ಯರಸ್ತೆಗೆ ಡಾ. ರಾಜ್ಕುಮಾರ್ ರಸ್ತೆ ಎಂದು ಹೆಸರಿಸಲಾಗಿದೆ.
ಗೂಗಲ್ ಡೂಡಲ್ ಗೌರವ
[ಬದಲಾಯಿಸಿ]ಗೂಗಲ್ ಸರ್ಚ್ನ ಡೂಡಲ್ ವಿಭಾಗದವರು ಡಾ. ರಾಜ್ಕುಮಾರ್ ರವರ ೮೮ನೇ ಹುಟ್ಟು ಹಬ್ಬದ ದಿನ ( ೨೪ ಏಪ್ರಿಲ್ ೨೦೧೭ ) ರಾಜ್ ರವರ ಡೂಡಲ್ ಪ್ರದರ್ಶಿಸುವ ಮೂಲಕ ಗೌರವ ಸಲ್ಲಿಸಿದರು. ಈ ಡೂಡಲ್ ದೇಶದಾದ್ಯಂತ ( google.co.in ) ಎಲ್ಲಾ ರಾಜ್ಯಗಳಲ್ಲೂ ಪ್ರದರ್ಶಿತಗೊಂಡು ಪರ ರಾಜ್ಯದವರಿಗೂ ರಾಜ್ ರವರ ಬಗ್ಗೆ ಕುತೂಹಲ ಮೂಡುವಂತೆ ಮಾಡಿತು. ತೆಂಕಣ ಭಾರತದ ನಟರಿಗೆ ಗೂಗಲ್ ಈ ರೀತಿಯ ಗೌರವ ಸಲ್ಲಿಸಿರುವುದು ಇದೇ ಮೊದಲು. ಇದಕ್ಕಾಗಿ ಕನ್ನಡಿಗರು ಗೂಗಲ್ನವರಿಗೂ ಅಭಿನಂದನೆ ಸಲ್ಲಿಸಿದರು.
ಪುಸ್ತಕಗಳು
[ಬದಲಾಯಿಸಿ]ಕನ್ನಡ ರಂಗಭೂಮಿ ಮತ್ತು ಸಿನೆಮಾಕ್ಕೆ ಡಾ. ರಾಜ್ ಕೊಡುಗೆ (ಪಿ.ಹೆಚ್.ಡಿ ನಿಬಂಧ)
[ಬದಲಾಯಿಸಿ]- ಬೆಂಗಳೂರಿನ ಬಸವನಗುಡಿಯಲ್ಲಿರುವ ವಿಜಯ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾದ ಡಿ. ಗುರುಮೂರ್ತಿ ಹಾರೋಹಳ್ಳಿ ಯವರು "ಕನ್ನಡ ರಂಗಭೂಮಿ ಮತ್ತು ಸಿನೆಮಾಕ್ಕೆ ಡಾ. ರಾಜ್ ಕೊಡುಗೆ" ಕುರಿತ ಸಂಶೋಧನಾತ್ಮಕ ಪ್ರಬಂಧ ಮಂಡಿಸಿ, ಮೈಸೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಈ ಸಂಶೋಧನೆಯ ಸಮಯದಲ್ಲಿ, ಡಾ. ರಾಜ್ ರವರನ್ನು ಹಲವಾರು ಬಾರಿ ಸಂದರ್ಶಿಸಿದ್ದಾರೆ.
- ೧೯೯೭ರಲ್ಲಿ ಪ್ರಾರಂಭಿಸಿದ ಸಂಶೋಧನೆಯನ್ನು ನಾಲ್ಕುವರ್ಷಗಳ ಕಾಲ ಡಾ. ಮಳಲಿ ವಸಂತಕುಮಾರ್ ರವರ ಮಾರ್ಗದರ್ಶನದಲ್ಲಿ ನಡೆಸಿದ ಗುರುಮೂರ್ತಿ ೨೦೦೧ರಲ್ಲಿ ಪಿ.ಹೆಚ್.ಡಿ ಪದವಿ ಪಡೆದರು.
ಪ್ರಾಣಪದಕ
[ಬದಲಾಯಿಸಿ]- ಪ್ರಾಣಪದಕ ಡಾ. ರಾಜಕುಮಾರ್ ರವರನ್ನು ಕುರಿತ 2013ರ ಅಕ್ಟೋಬರ್ ತಿಂಗಳಿನಲ್ಲಿ ಅ. ನಾ. ಪ್ರಹ್ಲಾದರಾವ್ ಬರೆದ ಸ್ವಾರಸ್ಯಕರ ಸಂಗತಿಗಳ ಮತ್ತೊಂದು ಪುಸ್ತಕ. ಶ್ರೀಮತಿ ಪಾರ್ವತಮ್ಮ ರಾಜಕುಮಾರ್ ನೆನಪಿನಾಳದಲ್ಲಿನ ಡಾ. ರಾಜಕುಮಾರ್ ಸಂಗತಿಗಳನ್ನು ಅನಾವರಣಗೊಳಿಸುವ, ವಸಂತ ಪ್ರಕಾಶನ ಪ್ರಕಾಶನಗೊಳಿಸಿರುವ ಅ. ನಾ. ಪ್ರಹ್ಲಾದರಾವ್ ಬರೆದ ವಿಶಿಷ್ಟ ಪುಸ್ತಕ 'ಪ್ರಾಣಪದಕ'. ಸುಮಾರು 120 ಪುಟಗಳ ಈ ಪುಸ್ತಕದ ಲೇಖನಗಳು `ಮಂಗಳ` ವಾರಪತ್ರಿಕೆಯಲ್ಲಿ ಪ್ರಕಟಿಗೊಂಡಿದ್ದವು.
- ಶ್ರೀಮತಿ ಪಾರ್ವತಮ್ಮ ರಾಜಕುಮಾರ್ ರವರು ಬೇರೆ ಬೇರೆ ಸಂದರ್ಭಗಳಲ್ಲಿ ಲೇಖಕರೊಂದಿಗೆ ಹಲವು ವಿಷಯಗಳನ್ನು ನೆನಪು ಮಾಡಿಕೊಂಡರು. 'ಪ್ರಾಣಪದಕ' ಹೆಸರಿನಲ್ಲಿ 'ಮಂಗಳ' ವಾರಪತ್ರಿಕೆ ಈ ಲೇಖನಗಳನ್ನು ಪ್ರಕಟಿಸಿತ್ತು.
ಬಂಗಾರದ ಮನುಷ್ಯ
[ಬದಲಾಯಿಸಿ]ಕನ್ನಡದ ವರನಟ ಡಾ. ರಾಜಕುಮಾರ್ ಲವರ ಜೀವನ ಹಾಗೂ ಸಾಧನೆ ಕುರಿತು ಕರ್ನಾಟಕ ಸರ್ಕಾರಕ್ಕಾಗಿ ಅ. ನಾ. ಪ್ರಹ್ಲಾದರಾವ್ ಬರೆದ ಬಂಗಾರದ ಮನುಷ್ಯ ಅತ್ಯಂತ ಜನಪ್ರಿಯ ಪುಸ್ತಕ.
- ಈ ಪುಸ್ತಕ ಇಂಗ್ಲಿಷ್ ಭಾಷೆಗೆ `ಡಾ. ರಾಜಕುಮಾರ್ ಇನ್ಮಿಟಬಲ್ ಆಕ್ಟರ್ ವಿಥ್ ಗೋಲ್ಡನ್ ವಾಯ್ಸ್` ಹೆಸರಿನಲ್ಲಿ ಭಾಷಾಂತರಗೊಂಡು ಅಮೆರಿಕದ ನ್ಯೂಜೆರ್ಸಿ ನಗರದಲ್ಲಿ ಬಿಡುಗಡೆಗೊಂಡಿತು.[೧೧] ಕನ್ನಡದ ನಟರೊಬ್ಬರನ್ನು ಕುರಿತ ಇಂಗ್ಲಿಷ್ ಪುಸ್ತಕವೊಂದು ಭಾರತದ ಹೊರಗಡೆ ಬಿಡುಗಡೆಗೊಂಡ ಮೊದಲ ಪುಸ್ತಕವೆಂದು ದಾಖಲೆಯನ್ನೂ ಮಾಡಿತು. ಕನ್ನಡ ಪುಸ್ತಕ ಬಿಡುಗಡೆಗೊಂಡ ಸಂದರ್ಭದಲ್ಲಿ ಡಾ. ರಾಜಕುಮಾರ್ ಹಾಗೂ ಶ್ರೀಮತಿ ಪಾರ್ವತಮ್ಮ ರಾಜಕುಮಾರ್ ರವರು ತಮ್ಮ ಮನೆಗೆ ಲೇಖಕರ ಕುಟುಂಬವನ್ನು ಬರಮಾಡಿಕೊಂಡು ಆತಿಥ್ಯ ನೀಡಿದ್ದರು.
- ೨೨೦ ಪುಟಗಳ ಈ ಪುಸ್ತಕ ಡಾ. ರಾಜಕುಮಾರ್ ರವರಿಂದಲೇ ಪ್ರಶಂಸೆಗೆ ಒಳಗಾಯಿತು.
- ಇದು ಡಾ. ರಾಜಕುಮಾರ್ ರವರನ್ನು ಕುರಿತಾದ ಮೊದಲ ಇಂಗ್ಲಿಷ್ ಪುಸ್ತಕವಷ್ಟೇ ಅಲ್ಲದೆ, ದೇಶದ ಹೊರಗಡೆ ಬಿಡುಗಡೆ ಆದ ಡಾ. ರಾಜಕುಮಾರ್ ಕುರಿತಾದ ಮೊದಲ ಪುಸ್ತಕವೂ ಹೌದು. ಈ ಪುಸ್ತಕದಲ್ಲಿ ಡಾ. ರಾಜಕುಮಾರ್ ಚಲನಚಿತ್ರಗಳ ಬಗ್ಗೆ ವಿವರಗಳಷ್ಟೆ ಅಲ್ಲದೆ, ಅವರ ಸಾಮಾಜಿಕ ಬದುಕು ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಯ ವಿವರಗಳನ್ನು ದಾಖಲಿಸಲಾಗಿದೆ.
- ಕನ್ನಡ ಪುಸ್ತಕ ೨೦೦೬ರಲ್ಲಿ ಅಮೆರಿಕದ ವಾಷಿಂಗ್ಟನ್ ನಗರದಲ್ಲಿ ನಡೆದ ಅಕ್ಕ ಸಮ್ಮೇಳನದಲ್ಲೂ ಹಾಗೂ ೨೦೦೬ರ ಕುವ್ಯೆತ್ ಕನ್ನಡ ಸಮ್ಮೇಳನದಲ್ಲೂ ಬಿಡುಗಡೆಗೊಂಡಿತು. ಇಂಗ್ಲಿಷ್ ಪುಸ್ತಕ ಬೆಂಗಳೂರಿನಲ್ಲಿ ಶ್ರೀಮತಿ ಪಾವ೯ತಮ್ಮ ರಾಜಕುಮಾರ್ ರವರಿಂದ ಬಿಡುಗಡೆಗೊಂಡಿತಲ್ಲದೆ, ಲಂಡನ್ ನಗರದಲ್ಲಿ ೨೦೦೮ರ ಆಗಸ್ಟ್ ತಿಂಗಳಿನಲ್ಲಿ ನಡೆದ ಕನ್ನಡ ಸಮ್ಮೇಳನದಲ್ಲಿ ಅಲ್ಲಿನ ಸೆನೆಟರ್ ಬಿಡುಗಡೆ ಮಾಡಿದರು.
ಇತರೆ ವಿಕಿಮೀಡಿಯ ಯೋಜನೆಗಳಲ್ಲಿ ಡಾ. ರಾಜ್ಕುಮಾರ್
[ಬದಲಾಯಿಸಿ]- ಕನ್ನಡ ವಿಕಿಸೊರ್ಸನಲ್ಲಿ ಡಾ. ರಾಜ್ಕುಮಾರ ಗಾಯನ
ಹೊರಗಿನ ಸಂಪರ್ಕಗಳು
[ಬದಲಾಯಿಸಿ]ರಾಜ್ಕುಮಾರ್ ಐ ಎಮ್ ಡಿ ಬಿನಲ್ಲಿ
- ದಟ್ಸ ಕನ್ನಡ.ಕಾಂ - ಡಾ. ರಾಜ್ ಲೇಖನಗಳ ಸಂಗ್ರಹ Archived 2006-04-09 ವೇಬ್ಯಾಕ್ ಮೆಷಿನ್ ನಲ್ಲಿ.
- ವಿಶ್ವಕನ್ನಡ.ಕಾಂ - ಡಾ. ರಾಜ್ ವಿಶೇಷ ಪರಿಚಯ (ಕೃಪೆ:"ಕನ್ನಡ ಸಿನಿಮಾ ಇತಿಹಾಸ ಪುಟಗಳಲ್ಲಿ" ಪುಸ್ತಕ) Archived 2013-12-08 ವೇಬ್ಯಾಕ್ ಮೆಷಿನ್ ನಲ್ಲಿ.
- ಬೇಡರಕಣ್ಣಪ್ಪ ಚಿತ್ರಕ್ಕೆ ಆಯ್ಕೆ ವಿವರಗಳು - ಹೆಚ್.ಎಲ್.ಎನ್.ಸಿಂಹರವರ ಪುತ್ರ ಹೆಚ್.ಎಲ್.ಶೇಷಚಂದ್ರ ಲೇಖನ (ಕನ್ನಡಪ್ರಭ) Archived 2007-09-28 ವೇಬ್ಯಾಕ್ ಮೆಷಿನ್ ನಲ್ಲಿ.
- ಡಾ ರಾಜಕುಮಾರ್ ಗಾಯನ Archived 2021-11-04 ವೇಬ್ಯಾಕ್ ಮೆಷಿನ್ ನಲ್ಲಿ.
- http://members.tripod.com/~arvintripod/raj.html
- http://www.rajkumarmemorial.com Archived 2013-06-15 ವೇಬ್ಯಾಕ್ ಮೆಷಿನ್ ನಲ್ಲಿ.
- http://www.gandhadagudi.com/forum/viewforum.php?f=18 Archived 2007-09-28 ವೇಬ್ಯಾಕ್ ಮೆಷಿನ್ ನಲ್ಲಿ.
ಉಲ್ಲೇಖಗಳು
[ಬದಲಾಯಿಸಿ]- ↑ "The Hindu, FrontLine - Pride of Kannada". Archived from the original on 2012-11-10. Retrieved 2013-03-12.
- ↑ BBC News South Asia - India's approach to bandit kidnapper
- ↑ Map of Mysore Kingdom & Madras Presidency - The whole of Talavadi block incl' Hassanur, Gajanur were with the Mysore Presidency
- ↑ "Hindustan Times - A Rs 100 million memorial to Rajkumar". Archived from the original on 2013-01-25. Retrieved 2013-03-12.
- ↑ "Economic and Political Weekly - Rajkumar and Kannada Nationalism" (PDF). Archived from the original (PDF) on 2013-11-01. Retrieved 2013-03-12.
- ↑ "Rajkumarmemorial.com - Life". Archived from the original on 2015-03-21. Retrieved 2013-03-12.
- ↑ https://kannada.boldsky.com/insync/life/2014/dr-rajkumar-birthday-special-remembering-annavru-on-his-86t-007370-pg1.html
- ↑ ಡಾ.ರಾಜ್ಕುಮಾರ್ಗೆ ಗೂಗಲ್ ಡೂಡಲ್ ಮೂಲಕ ಗೌರವ
- ↑ Shishir Prasad, N.S. Ramnath, Shohini Mitter (27 Apr 2020). "100 years of Indian cinema: 25 greatest performances of Indian cinema". Forbes. Retrieved 29 Sep 2020.
{{cite news}}: CS1 maint: multiple names: authors list (link) - ↑ https://kannada.news18.com/photogallery/entertainment/what-are-the-real-names-of-sandalwood-these-famous-actors-hg-402775.html
- ↑ https://web.archive.org/web/20230111120122/https://openlibrary.org/books/OL22530456M/Dr._Rajkumar_the_inimitable_actor_with_a_golden_voice
