ಸದಸ್ಯ:Ashwini Sindhu V/ನನ್ನ ಪ್ರಯೋಗಪುಟ
ಅಕ್ಕಮಹಾದೇವಿ
ಜನನ ಹನ್ನೆರಡನೆಯ ಶತಮಾನಶಿವಮೊಗ್ಗ ಜಿಲ್ಲೆ, ಶಿಕಾರಿಪುರ-ಶಿರಾಳ ಕೊಪ್ಪದ ನಡುವೆ ಇರುವ ಉಡುತಡಿ ಅಥವಾ ಉಡಗಣಿ/ಉಡುಗಣಿ ಮರಣ ಶ್ರೀಶೈಲದ ಕದಳಿ ಅಂಕಿತನಾಮ ಚೆನ್ನಮಲ್ಲಿಕಾರ್ಜುನ ಇದಕ್ಕೆ ಪ್ರಸಿದ್ಧ ಯೋಗಾಂಗ ತ್ರಿವಿಧಿ, ಸೃಷ್ಟಿಯ ವಚನ ಮಂತ್ರಗೋಪ್ಯ ಮತ್ತು ಇತರೆ ವಚನಗಳು ಹೆತ್ತವರು ನಿರ್ಮಲಶೆಟ್ಟಿ ಮತ್ತು ಸುಮತಿ ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರಿವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ. ಚಿಕ್ಕ ವಯಸ್ಸಿನಲ್ಲೆ ಸಕಲ ಸುಖವನ್ನು ತ್ಯಜಿಸಿದ ಅಕ್ಕ, ಎದುರಿಸಿದ ಪರೀಕ್ಷೆಗಳು ಬಹಳಷ್ಟು. ಸಾಕ್ಷಾತ್ ಶಿವ ( ಮಲ್ಲಿಕಾರ್ಜುನ)ನನ್ನು ಪತಿ ಎಂದು ಸ್ವೀಕರಿಸಿ, ಲೌಕಿಕ ಜಗತ್ತನ್ನು ಧಿಕ್ಕರಿಸಿ, ಕೇಶಾಂಬರೆಯಾಗಿ ನಡೆದ ಅಕ್ಕ, ಹಲವಾರು ಭಕ್ತರಿಗೆ ಮಾದರಿಯಾಗಿದ್ದಾಳೆ. ಜೀವನ
ಶರಣೆ ಅಕ್ಕಮಹಾದೇವಿಯವರು ಜನಿಸಿದ್ದು ಶಿವಮೊಗ್ಗ ಜಿಲ್ಲೆ, ಶಿಕಾರಿಪುರ-ಶಿರಾಳ ಕೊಪ್ಪದ ನಡುವೆ ಇರುವ ಉಡುತಡಿ ಅಥವಾ ಉಡಗಣಿ ಇಲ್ಲವೆ ಉಡುಗಣಿ ಎಂದೇ ಪ್ರಸಿದ್ದವಾಗಿರುವ ಪುಟ್ಟ ಗ್ರಾಮದಲ್ಲಿ [೧] ೫, ಮೊದಲನೇ ಆವೃತ್ತಿ (ಪುಸ್ತಕ). ಸುಮಾರು 15 ಕಿ.ಮಿ. ಹಾಗೂ ಶಿರಾಳ ಕೊಪ್ಪದಿಂದ 4 ಕಿ.ಮಿ.ದೂರದಲ್ಲಿದೆ. ಇದೀಗ ಇದು ಪ್ರವಾಸಿ ತಾಣವಾಗಿಯೂ ಪ್ರಸಿದ್ದವಾಗಿದೆ. ಪರರ ಪಾಲಾಗಿದ್ದ ಇಲ್ಲಿರುವ ಕೌಶಿಕ ಮಹಾರಾಜರ ಕೋಟೆ ಹಾಗೂ ಅಕ್ಕನ ದೇವಸ್ಥಾನ ಇರುವ ಜಮೀನನ್ನು ಉಳಿಸಲು ಪ್ರಯತ್ನಿಸಿ, ಹೋರಾಟ ನಡೆಸಿ, ಯಶಸ್ವಿ ಯಾಗಿದ್ದು ಸಿರಿಗೆರೆಯ ಶ್ರೀಗಳಾಗಿದ್ದ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮೀಜಿಯವರು ಹಾಗೂ ಹಿರೇ ಜಂಬೂರಿನ ಸ್ವಾತಂತ್ರ ಹೋರಾಟೀಲರು. ಇದನ್ನು ಇವರು ಉಳಿಸಿ ಕೊಟ್ಟ ನಂತರ ಸರಕಾರ ಇತ್ತ ಗಮನ ಹರಿಸಿ,ಅದರ ಅಭಿವೃದ್ದಿಗೆ ಮುಂದಾಗಿದೆ. ಇಂತಹ ಉಡುತಡಿಯಿಂದ ಎಲ್ಲವನ್ನೂ ತ್ಯಜಿಸಿ ಹೊರಟ ಅಕ್ಕಮಹಾದೇವಿಯವರು ಮುಂದೆ [ಬಸವ ಕಲ್ಯಾಣ]ದ ಅನುಭವ ಮಂಟಪದಲ್ಲಿ ಅಲ್ಲಮಪ್ರಭು, ಬಸವಣ್ಣ, ಚೆನ್ನಬಸವಣ್ಣ, ಸಿದ್ಧರಾಮೇಶ್ವರ ಮೊದಲಾದ ಶರಣರೊಡನೆ ಕಲ್ಯಾಣದ ಕ್ರಾಂತಿಯಲ್ಲಿ ತಮ್ಮನ್ನು ತಾವೂ ತೊಡಗಿಸಿಕೊಂಡರಲ್ಲದೇ, "ಚನ್ನಮಲ್ಲಿಕಾರ್ಜುನ" ಎಂಬ ಅಂಕಿತ ನಾಮದಲ್ಲಿ ವಚನ ಸಾಹಿತ್ಯಕ್ಕೆ (ಶರಣ ಸಾಹಿತ್ಯ) ತಮ್ಮದೇ ಆದ ಸಾಹಿತ್ಯ ಸೇವೆಯನ್ನು ಸಲ್ಲಿಸಿದ್ದಾರೆ.
ಅಕ್ಕನ ಅನುಭಾವ ಜೀವನ
ಅಕ್ಕಮಹಾದೇವಿ ಶರಣ ಚಳುವಳಿಯಲ್ಲಿ ಎತ್ತರದ ಚೇತನವಾಗಿ ಮೂಡಿ ಬಂದ ವ್ಯಕ್ತಿತ್ವ. ಅವರ ಇಡೀ ಜೀವನ ಕಥನ, ಐತಿಹ್ಯ, ವಿಸ್ಮಯ, ಪ್ರಭಾವಗಳಿಂದ ತುಂಬಿದ್ದರೂ ಸಹ, ಅವರ ಬಗ್ಗೆ ಅವರ ಸಮಕಾಲೀನ ವಚನಕಾರರೂ, ಅಕ್ಕನ ಕಾಲಕ್ಕೆ ತುಂಬಾ ಹತ್ತಿರದವನಾದ ಹರಿಹರ ಮಹಾಕವಿಯು ರಚಿಸಿರುವ 'ಮಹಾದೇವಿಯಕ್ಕಗಳ ರಗಳೆ' ಮತ್ತು ಸ್ವತಃ ಅಕ್ಕಮಹಾದೇವಿಯವರೇ ರಚಿಸುವ ವಚನಗಳೂ, ಅವರ ವ್ಯಕ್ತಿತ್ವವನ್ನು ಕಟ್ಟಿ ಕೊಡುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ. ಈ ಎಲ್ಲವನ್ನೂ ಗಮನಿಸಿದಾಗ ಅಕ್ಕಮಹಾದೇವಿಯವರ ಜೀವನ ಅಸಾಮಾನ್ಯವಾದ, ವೈಶಿಷ್ಟ್ಯತೆಯಿಂದ, ವೈಚಾರಿಕವಾದ, ಅನುಭಾವ ಪೂರ್ಣವಾದ , ನುಡಿ,ನಡೆಗಳೊಂದಾದ ಪರಿಯಲ್ಲಿರುವುದು ಕಂಡುಬರುತ್ತದೆ . ವಚನ ಚಳುವಳಿಯ ಸಮಯದಲ್ಲಿ, ಸಾಹಿತ್ಯದ ದೃಷ್ಟಿಯಿಂದ ಗಮನಿಸುವುದಾದರೆ, ಅಲ್ಲಮ ಮತ್ತು ಅಕ್ಕ ಅಂದಿನ ಅತ್ಯಂತ ವಿಶಿಷ್ಟ ಸಂವೇದನೆಯ ವ್ಯಕ್ತಿತ್ವದವರಾಗಿ ಗಮನ ಸೆಳೆಯುತ್ತಾರೆ. ಅನುಭಾವಿಯೂ, ಕವಿಯೂ ಆಗಿದ್ದ ಅಕ್ಕಮಹಾದೇವಿಯವರ ವಚನಗಳು, ಕನ್ನಡ ಸಾಹಿತ್ಯದ ಮೌಲಿಕ ಬರವಣಿಗೆಗಳಾಗಿವೆ. ವಚನಕಾರರಲ್ಲಿಯೇ ಅತ್ಯಂತ ಕಿರಿಯ ವಯಸ್ಸಿನ ಅನುಭಾವಿಯಾಗಿದ್ದರೂ ಸಹ, ವಿಶಿಷ್ಟ ಜೀವನಾನುಭವವನ್ನು ಹೊಂದಿದ ಕಾರಣದಿಂದ, ಅವರ ಬರಹಗಳು ಗಮನಾರ್ಹವಾಗಿವೆ.
ಉದಾ: 'ಲೋಕದ ಚೇಷ್ಟೆಗೆ ರವಿ ಬೀಜವಾದಂತೆ, ಕರಣಂಗಳ ಚೇಷ್ಟೆಗೆ ಮನಸ್ಸು ಬೀಜ', 'ಬೆಟ್ಟದಾ ಮೇಲೊಂದು ಮನೆಯ ಮಾಡಿ , ಮೃಗಗಳಿಗೆ ಅಂಜಿದೊಡೆಂತಯ್ಯಾ' , 'ಹಸಿವಾದರೆ ಭಿಕ್ಷಾನ್ನಗಳುಂಟು, ತೃಷೆಯಾದರೆ ಕೆರೆ ಹಳ್ಳಗಳುಂಟು'- ಮುಂತಾದ ವಚನಗಳು ಅವರ ಲೋಕಾನುಭವ, ಜ್ಞಾನ ಸಂಪನ್ನತೆ, ಅಭಿವ್ಯಕ್ತಿ ಸಾಮರ್ಥ್ಯಕ್ಕೆ ನಿದರ್ಶನಗಳಾಗಿವೆ .
ಅಕ್ಕನ ಹಿರಿಮೆ
ಶೂನ್ಯ ಸಂಪಾದನೆಕಾರರು 'ಮಹಾದೇವಿಯಕ್ಕಗಳ ಸಂಪಾದನೆ' ಎಂಬ ಒಂದು ಅಧ್ಯಾಯವನ್ನೇ ರಚಿಸಿ, ಅವರಿಗೆ ಗೌರವ ತೋರಿದ್ದಾರೆ. ಹರಿಹರ ಮಹಾಕವಿಯ ಮಹಾದೇವಿಯಕ್ಕನ ರಗಳೆ, ಇಪ್ಪತ್ತನೆಯೆ ಶತಮಾನದ ನವೋದಯ ಕಾಲದ ಸಾಹಿತಿ ಎಚ್.ತಿಪ್ಪೇರುದ್ರಸ್ವಾಮಿಯವರ 'ಕದಳಿಯ ಕರ್ಪುರ' ಅಕ್ಕನವರ ವ್ಯಕ್ತಿತ್ವವನ್ನು ಕಟ್ಟಿಕೊಡುವ ಸಮರ್ಥ ಬರಹಗಳು . ಅಕ್ಕಮಹಾದೇವಿಯವರ ಜೀವನದಲ್ಲಿ ನಿರ್ಣಾಯಕ ಘಟನೆಗಳಲ್ಲಿ, ಪ್ರಮುಖವಾದವುಗಳು ಈ ಎರಡು,
ಒಂದನೆಯದು: ಅಧಿಕಾರ, ಸಂಪತ್ತು, ವೈಭವ, ಆಡಂಬರ, ಭೋಗ ಜೀವನಗಳನ್ನು ಸಂಪೂರ್ಣವಾಗಿ ತಿರಸ್ಕರಿಸಿ, ಈ ಎಲ್ಲ ಬಂಧನಗಳಿಂದ ಬಿಡುಗಡೆ ಪಡೆದು, ಸಾಮಾನ್ಯರಲ್ಲಿ ಸಾಮಾನ್ಯಳಂತೆ ಜನ ಜೀವನದಲ್ಲಿ ಬೆರೆತುದು; ಇದಕ್ಕಾಗಿ ಅರಸೊತ್ತಿಗೆಯನ್ನು ಎದುರು ಹಾಕಿಕೊಳ್ಳಲು ಹಿಂಜರಿಯದಿದ್ದುದು. ಎರಡನೆಯದು : ಶರಣ ಚಳುವಳಿಯಲ್ಲಿ ಭಾಗವಹಿಸಲು ನಿರ್ಣಯಿಸಿ, ಅನುಭವ ಮಂಟಪವನ್ನು ಪ್ರವೇಶ ಮಾಡಿದುದು. ಅಕ್ಕನವರ ಅನುಭವ ಮಂಟಪದ ಪ್ರವೇಶದ ಮೊದಲ ದಿನವನ್ನು ಸ್ಮರಿಸದ ಶರಣ ಸಾಹಿತ್ಯಕಾರನಿಲ್ಲ, ಎನ್ನುವಷ್ಟು ಅಪೂರ್ವ ಸ್ವಾಗತ ಆಕೆಗೆ ಶರಣರಿಂದ ದೊರಕಿತು. ಅಲ್ಲಿ ಅಲ್ಲಮಪ್ರಭು ಮತ್ತು ಅಕ್ಕನವರ ನಡುವೆ ನಡೆಯಿತೆನ್ನಲಾದ ಸಂಭಾಷಣೆ ; ಅನುಭಾವದ ಉತ್ತುಂಗದ ಋಷಿವಾಣಿಯ ರೂಪದಲ್ಲಿ ವಚನಗಳಲ್ಲಿ ಸಂಗ್ರಹಿತವಾಗಿದೆ.
ಕನ್ನಡ ಸಾಹಿತ್ಯ ಮೊದಲ ಬಂಡಾಯ ಕವಯತ್ರಿ ಮತ್ತು ವಚನಗಾರ್ತಿ ಹಾಗೂ ಮಹಿಳೆಯರ ಪ್ರತಿನಿಧಿಯಾಗಿ ಅಭಿವ್ಯಕ್ತಿಯಲ್ಲಿ ಪುರುಷ ಸಮಾಜವನ್ನು ಪ್ರತಿಭಟಿಸಿದವರು. ಸಾಮಾಜಿಕ ಬದಲಾವಣೆಗೆ ಶ್ರಮಿಸಿದವರು. "ಚನ್ನಮಲ್ಲಿಕಾರ್ಜುನ" ಎಂಬುದು ಈಕೆಯ ವಚನಗಳ ಅಂಕಿತ ನಾಮ. "ಯೋಗಾಂಗತ್ರಿವಿಧಿ" ಅಕ್ಕಮಹಾದೇವಿಯ ಪ್ರಮುಖ ಕೃತಿ. ಅಕ್ಕಮಹಾದೇವಿಯ ಆಯ್ದ ವಚನಗಳು
ಬೆಟ್ಟದ ಮೇಲೊಂದು ಮನೆಯ ಮಾಡಿ ಮೃಗಗಳಿಗಂಜಿದೊಡೆಂತಯ್ಯ? ಸಮುದ್ರದ ತಡಿಯಲೊಂದು ಮನೆಯ ಮಾಡಿ ನೊರೆ ತೆರೆಗಳಿಗಂಜಿದೊಡೆಂತಯ್ಯ? ಸಂತೆಯೊಳಗೊಂದು ಮನೆಯ ಮಾಡಿ ಶಬ್ದಕ್ಕೆ ನಾಚಿದೊಡೆಂತಯ್ಯ? ಚೆನ್ನಮಲ್ಲಿಕಾರ್ಜುನದೇವ ಕೇಳಯ್ಯ ಈ ಲೋಕದೊಳಗೆ ಹುಟ್ಟಿದ ಬಳಿಕ ಸ್ತುತಿ-ನಿಂದೆಗಳು ಬಂದರೆ ಮನದಲ್ಲಿ ಕೋಪವ ತಾಳದೆ ಸಮಾಧಾನಿಯಾಗಿರಬೇಕು.
ಈಳೆ-ನಿಂಬೆ-ಮಾವು-ಮಾದಲಕ್ಕೆ ಹುಳಿ ನೀರೆರೆದವರಾರಯ್ಯ? ಕಬ್ಬು-ಬಾಳೆ-ನಾರಿವಾಳಕ್ಕೆ ಸಿಹಿ ನೀರೆರೆದವರಾರಯ್ಯ? ಕಳವೆ-ಶಾಲಿಗೆ ಓಗರದ ಉದಕವ ನೆರೆದವರಾರಯ್ಯ? ಮರುಗ-ಮಲ್ಲಿಗೆ-ಪಚ್ಚೆ-ಮುಡಿವಾಳಕ್ಕೆ ಪರಿಮಳದುದಕವ ನೆರೆದವರಾರಯ್ಯ? ಇಂತೀ ಜಲ ಒಂದೆ, ನೆಲ ಒಂದೆ, ಆಕಾಶ ಒಂದೆ! ಒಂದೇ ಜಲವು ಹಲವು ದ್ರವ್ಯಂಗಳ ಕೂಡಿ ತನ್ನ ಪರಿ ಬೇರಾಗಿಹ ಹಾಂಗೆ ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯನು ಹಲವು ಜಗಂಗಳ ಕೂಡಿ ಕೊಂಡಿದ್ದರೇನು? ತನ್ನ ಪರಿ ಬೇರೆ!
ತನು ಕರಗದವರಲ್ಲಿ ಮಜ್ಜನವನೊಲ್ಲೆಯಯ್ಯ ನೀನು ಮನ ಕರಗದವರಲ್ಲಿ ಪುಷ್ಪವನೊಲ್ಲೆಯಯ್ಯ ನೀನು ಹದುಳಿಗರಲ್ಲದವರಲ್ಲಿ ಗಂಧಾಕ್ಷತೆಯನೊಲ್ಲೆಯಯ್ಯ ನೀನು ಅರಿವು ಕಣ್ತೆರೆಯದವರಲ್ಲಿ ಆರತಿಯನೊಲ್ಲೆಯಯ್ಯ ನೀನು ಭಾವಶುದ್ಧವಿಲ್ಲದವರಲ್ಲಿ ಧೂಪವನೊಲ್ಲೆಯಯ್ಯ ನೀನು ಪರಿಣಾಮಿಗಳಲ್ಲದವರಲ್ಲಿ ನೈವೇದ್ಯವನೊಲ್ಲೆಯಯ್ಯ ನೀನು ತ್ರಿಕರಣಶುದ್ಧವಿಲ್ಲದವರಲ್ಲಿ ತಾಂಬೂಲವನೊಲ್ಲೆಯಯ್ಯ ನೀನು ಹೃದಯಕಮಲ ಅರಳದವರಲ್ಲಿ ಇರಲೊಲ್ಲೆಯಯ್ಯ ನೀನು ಎನ್ನಲ್ಲಿ ಏನುಂಟೆಂದು ಕರಸ್ಥಲವನಿಂಬುಗೊಂಡೆ ಹೇಳಾ ಚೆನ್ನಮಲ್ಲಿಕಾರ್ಜುನಯ್ಯ.
ನರ-ಜನ್ಮವ ತೊಡೆದು ಹರ-ಜನ್ಮವ ಮಾಡಿದ ಗುರುವೆ ಭವ ಬಂಧನವ ಬಿಡಿಸಿ ಪರಮಸುಖವ ತೋರಿದ ಗುರುವೆ ಭವಿ ಎಂಬುದ ತೊಡೆದು ಭಕ್ತೆ ಎಂದೆನಿಸಿದ ಗುರುವೆ ಚೆನ್ನಮಲ್ಲಿಕಾರ್ಜುನನ ತಂದೆನ್ನ ಕೈವಶಕೆ ಕೊಟ್ಟ ಗುರುವೆ ನಮೋ ನಮೋ